ರಾಯಚೂರು:ಜಿಲ್ಲೆಯ ಜನರ ಆರೋಗ್ಯ ಸುರಕ್ಷತಾ ದೃಷ್ಟಿಯಿಂದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.ಅವರು ಜ.5ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದೆ, ಇದರಿಂದ ಚಿಕಿತ್ಸೆಗೆ ಬರುವ ರೋಗಿಗಳಿಗೆ ಉಪಚರಿಸುದರಲ್ಲಿ ತೊಂದರೆಯಾಗುತ್ತಿದೆ, ಈ ನಿಟ್ಟಿನಲ್ಲಿ ಖಾಲಿಯಿರುವ ಕೇಂದ್ರಗಳಿಗೆ ಕೂಡಲೇ ವೈದ್ಯರ ನೇಮಕ ಮಾಡುವಂತೆ ಅವರು ತಿಳಿಸಿದರು. ರಾಯಚೂರು ತಾಲೂಕಿನ ಮಟಮಾರಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬರೆ ಕಾರ್ಯನಿರ್ವಹಿಸುತ್ತಿರುವುದರಿಂದ ಚಿಕಿತ್ಸೆಗೆಂದು ಬರುವ ರೋಗಿಗಳು, ಗರ್ಭಿಣಿ ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಠಿಯಿಂದ ಖಾಲಿಯಿರುವ ಕೇಂದ್ರಗಳಿಗೆ ವೈದ್ಯರು ಹಾಗೂ ಸಿಬ್ಬಂದಿಯನ್ನು ತಕ್ಷಣವೇ ನೇಮಕ ಮಾಡಲು ಅಗತ್ಯ ಕ್ರಮ ಜರುಗಿಸಬೇಕೆಂದರು. ಶಾಲೆ-ಕಾಲೇಜುಗಳು ಇದೀಗ ಆರಂಭಗೊಂಡಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಕೋವಿಡ್ -19 ತಪಾಸಣೆ ಮಾಡಬೇಕು, ಸೋಂಕು ಕಂಡುಬಂದಲ್ಲಿ ಅಗತ್ಯ ಕ್ರಮವಹಿಸಬೇಕು, ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ವಿತರಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ತಿಳಿಸಿದರು. ದಿಶಾ ಸಭೆಗೆ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸಂಬಂಧಿಸಿದ ಇಲಾಖೆಗಳ ಕಡ್ಡಾಯವಾಗಿ ಹಾಜರಾಗಬೇಕು, ಇಂದಿನ ಸಭೆಗೆ ಗೈರು ಹಾಜರಾದ ಬಿಎಸ್ಎನ್ಎಲ್, ಅಂಚೆ ಕಚೇರಿ ಅಧಿಕಾರಿಗೆ ನೋಟಿಸ್ ಜಾರಿ ಮಾಡಬೇಕು ಹಾಗೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಪತ್ರಮುಖೇನ ತಿಳಿಸುವಂತೆ ಸಂಸದರು ಹೇಳಿದರು.ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರು ಮಾತನಾಡಿ, ಕೃಷ್ಣ ನದಿ ಸೇತುವೆ ಶಿಥಿಲಗೊಳ್ಳುತ್ತಿದೆ, ಕೂಡಲೇ ದುರಸ್ತಿ ಪಡಿಸುವಂತೆ ಸಭೆಯ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಸಂಸದರು ಆ ಸೇತುವೆ ನಿರ್ಮಾಣಕ್ಕೆ ಬೇಕಾದ ಅಗತ್ಯ ಕ್ರಮ ಜರುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಾಯಚೂರು – ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ ಆದರೂ ಸಹ ರಸ್ತೆ ಕಾಮಗಾರಿ ಉದ್ಘಾಟಿಸಲಾಗಿದೆ ಎಂದು ಸಂಸದರು ಅಸಮಾಧಾನ ವ್ಯಕ್ತಪಡಿಸಿದರು.ಕೊಪ್ಪಳ ಸಂಸದ ಸಂಗಣ್ಣ ಕರಡಿ ಮಾತನಾಡಿ, ಸಭೆಗೆ ಗೈರು ಹಾಜರಾದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗೆ ನೋಟಿಸ್ ನೀಡಬೇಕು, ಸರ್ಕಾರದ ಕಾಮಗಾರಿಗಳನ್ನು ಉದ್ಘಾಟಿಸುವ ಸಂದರ್ಭದಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಶಿಷ್ಠಚಾರ ಪಾಲಿಸಬೇಕೆಂದರು.ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಮಾತನಾಡಿ, 847 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಕೊರತೆ ನೀಗಿಸಲು ಆಯಾ ಗ್ರಾಮದ ಪ್ರಾಥಮಿಕ ಶಾಲೆಗಳಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು. ಒಂದು ತಿಂಗಳೊಳಗೆ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಗುರುತಿಸುವುದನ್ನು ಅಂತಿಮಗೊಳಿಸಬೇಕೆಂದರು.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆದಿಮನಿ ವೀರಲಕ್ಷ್ಮೀ ಅವರು ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಅಂಗನವಾಡಿ ನಿರ್ಮಾಣ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳು ಈ ಕಾರ್ಯವನ್ನು ಅನುμÁ್ಠನಗೊಳಿಸಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೀರನಗೌಡ ಮಾತನಾಡಿ, ನಗರ ಪ್ರದೇಶದಲ್ಲಿ 425 ಹಾಗೂ ಗ್ರಾಮೀಣ ಪ್ರದೇಶದಲ್ಲಿ 422 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಕೊರತೆಯಿದೆ. ಸರ್ಕಾರಿ ಜಾಗ ಲಭ್ಯವಿರುವಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಲಾಗತ್ತದೆ ಎಂದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ನಿವೇಶನ ಕೊರತೆಯಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಸ್ಥಳ ಗುರುತಿಸಲು ಈಗಾಗಲೇ ಸೂಚಿಸಲಾಗಿದೆ ಎಂದರು.ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಇಲ್ಲಿಯವರಗೆ 14,173 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿವೆ. 13,972 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 158 ಜನರು ಸಾವಿಗೀಡಾಗಿದ್ದಾರೆ. 2,36,654 ಜನರನ್ನು ಪರೀಕ್ಷೆ ಮಾಡಲಾಗಿದೆ. 2,19,003 ಜನರಲ್ಲಿ ಸೋಂಕು ಪತ್ತೆಯಾಗಿಲ್ಲ. 14,173 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ರಾಯಚೂರು ತಾಲೂಕಿನಲ್ಲಿ 6419, ದೇವದುರ್ಗ 1707, ಲಿಂಗಸೂಗೂರು 1718, ಮಾನವಿ 1887, ಸಿಂಧನೂರು 2442 ಜನರಲ್ಲಿ ಸೋಂಕು ಪತ್ತೆಯಾಗಿತ್ತು ಎಂದರು.
ದಿಶಾ ಸಮಿತಿ ಸದಸ್ಯ ನಾಗಪ್ಪ ಬುಡಿದಿನ್ನಿ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಕೆ.ಎಚ್. ದುರಗೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
**********
ವಾಹನ ನೋಂದಣಿ ಅವಧಿ ವಿಸ್ತರಣೆ
ರಾಯಚೂರು,ಜ.5-ಭಾರತ್ ಸ್ವೇಜ್-4 ಮಾಪನದ ಎಲ್ಲಾ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಜನವರಿ 16ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಭಾರತದ ಸ್ಪೇಜ್-4 ವಾಹನಗಳು ನಮೂದಿಗಾಗಿ ಬಾಕಿ ಇರುವ ವಾಹನಗಳಿಗೆ ಕೊನೆಯ ಅವಕಾಶವಾಗಿ 2020 ಮಾರ್ಚ್ 31 ವರೆಗೆ ಮಾರಟವಾಗಿ ಇ-ಪೆÇ್ರೀಟ್ಲ್ರ್ನಲ್ಲಿ ನಮೂದಿಸಲು ಬಾಕಿ ಇರುವ ವಾಹನಗಳನ್ನು ನಮೂದಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ್ ಜಿ.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌಶಲ್ಯ ಅಭಿವೃದ್ಧಿ ತರಬೇತಿ ಸದುಪಯೋಗ ಪಡೆದುಕೊಳ್ಳಿ- ಶಶಿಕಲಾ
ರಾಯಚೂರು,ಜ.5- ಮಾಜಿ ದೇವದಾಸಿ ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಕೌಶಲ್ಯ ಅಭಿವೃದ್ಧಿ ತರಬೇತಿ ಏರ್ಪಡಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರು ತಿಳಿಸಿದರು.
ಅವರು ಜ.4ರ ಸೋಮವಾರ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವೀರನಗೌಡ, ಅಭಿವೃದ್ಧಿ ನಿಗಮದ ಅಧಿಕಾರಿ ಗೋಪಾಲ್ ನಾಯಕ್, ಪುರಸಭೆ ಅಧ್ಯಕ್ಷರಾದ ಪೋಲಿಸ್ ಪಾಟೀಲ್, ಉಪಾಧ್ಯಕ್ಷ ಕವಿತಾ ಮಟ್ಟೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುದೀಪ್ ಕುಮಾರ, ತುರ್ವಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅಶೋಕ, ಲಿಂಗಸೂಗೂರು ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶರಣಮ್ಮ ಹೊನ್ನಳ್ಳಿ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, ದೇವದಾಸಿ ಪುನರ್ವಸತಿ ಯೋಜನೆ ಯೋಜನಾ ಅನುಷ್ಠಾನಾಧಿಕಾರಿಗಳಾದ ಭಾರತಿ, ಶಾಂತಾ ಬಾಯಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದರು.