ಕೋವಿಡ್ ನಿಯಂತ್ರಣಕ್ಕೆ ಸಹಕಾರ ಅಗತ್ಯ : ಸಚಿವ ಉಮೇಶ ಕತ್ತಿ

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ : ಬಾಗಲಕೋಟೆ

ಬಾಗಲಕೋಟೆ : ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳುತ್ತಿದ್ದು, ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಹೇಳಿದರು.

 ನವನಗರದ ಪತ್ರಿಕಾಭವನದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ವೈರಸ್ ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಅನುಸರಿಸುತ್ತಿದೆ. ಇದಕ್ಕೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದರು. ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಸಿಬ್ಬಂದಿಗಳು, ಫ್ರಂಟ್‍ಲೈನ್ ವರ್ಕರ್ಸ್ ಹಾಗೂ 45 ವರ್ಷ ಮೇಲ್ಪಟ್ಟ ಕಹಾಗೂ ದೀರ್ಘಕಾಲ ಖಾಯಿಲೆಗಳುಳ್ಳ 2.46 ಲಕ್ಷ ಜನರಿಗೆ ಮೊದಲ ಹಂತದ ಲಸಿಕೆ ನೀಡಲಾಗಿದೆ. 2ನೇ ಹಂತದಲ್ಲಿ 53269 ಜನರಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್ ಸೇರಿ ಒಟ್ಟು 2.99 ಲಕ್ಷ ಜನರಿಗೆ ನೀಡಲಾಗಿದೆ ಎಂದು ತಿಳಿಸಿದರು.

 ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ 6 ಸರಕಾರಿ ಹಾಗೂ 33 ಖಾಸಗಿ ಆಸ್ಪತ್ರೆಗಳಲ್ಲಿನ ಲಭ್ಯವಿರುವ ಬೆಡ್‍ಗಳ ಮಾಹಿತಿಯನ್ನು ಎನ್‍ಐಸಿ ಪೋರ್ಟಲ್‍ನಲ್ಲಿ ಪ್ರತಿದಿನ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 1859 ವಿವಿಧ ಬೆಡ್‍ಗಳ ಪೈಕಿ 1442 ಬೆಡ್ ಬಳಕೆಯಾಗುತ್ತಿದ್ದು, ಇನ್ನು 417 ಬೆಡ್‍ಗಳು ಚಿಕಿತ್ಸೆಗೆ ಲಭ್ಯವಿರುತ್ತವೆ. ವಿವಿಧ ಬೆಡ್‍ಗಳ ಲಭ್ಯತೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನ 24 ಗಂಟೆಗಳ ಕಾಲ ಕೋವಿಡ್ ವಾರ್‍ರೂಮ್ ಸಹಾಯವಾಣಿ ತೆರೆಯಲಾಗಿದೆ.  ಜಿಲ್ಲೆಯ ಎಲ್ಲ ತಾಲೂಕು ಸೇರಿ ಒಟ್ಟು 10 ಸಿಸಿಸಿ ಕೇಂದ್ರಗಳನ್ನು ತೆರೆಯಲಾಗಿದ್ದು, 866 ಬೆಡ್‍ಗಳ ಪೈಕಿ 664 ಬೆಡ್‍ಗಳು ಖಾಲಿ ಇರುತ್ತವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ಪ್ರತಿದಿನ 18 ರಿಂದ 19 ಕೆಎಲ್ ಆಕ್ಸಿಜನ್ ಅವಶ್ಯವಿದ್ದು, 17 ರಿಂದ 18 ಕೆ.ಎಲ್ ಆಕ್ಸಿಜನ್ ಸದ್ಯ ಸಿಗಿಕೇರಿ ಕ್ರಾಸ್‍ನಲ್ಲಿರುವ ಎಚ್.ಎಸ್.ಕಂಠಿ ಇಂಡಸ್ಟ್ರೀಜ್ ಪ್ರಾವೈಟ್ ಲಿಮಿಟೆಡ್‍ನಿಂದ ಪೂರೈಕೆಯಾಗುತ್ತಿದೆ. ಆಕ್ಸಿಜನ್ ಕೊರತೆಯಾಗದಂತೆ ಆಕ್ಸಿಜನ್ ಸಿಲಿಂಡರ್‍ಗಳನ್ನು ಬಳಸಾಗುತ್ತಿದೆ. ಅಲ್ಲದೇ ಪ್ರತಿದಿನ 150 ರಿಂದ 200 ವರೆಗೆ ರೆಮಿಡಿಸಿವರ್ ಚುಚ್ಚುಮದ್ದು ಅವಶ್ಯಕತೆಯಿದ್ದು, ಇಲ್ಲಿವರೆಗೆ 7128 ರೆಮಿಡಿಸಿವರ್ ಚುಚುಮದ್ದು ಸ್ವೀಕೃತವಾಗಿದ್ದು, ಆಯವುದೇ ರೀತಿಯ ತೊಂದರೆ ಇರುವದಿಲ್ಲ ಎಂದು ತಿಳಿಸಿದರು.

ಕಪ್ರ್ಯೂ ಮತ್ತು ಲಾಕ್‍ಡೌನ್ ಅವಧಿಯಲ್ಲಿ 5861 ಜನ ವಲಸಿಗರು ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರ ಆರೋಗ್ಯ ತಪಾಸಣೆ ಮಾಡಲಾಗಿದೆ. ಅದರಲ್ಲಿ 542 ಜನರಿಗೆ ಸೋಂಕು ತಗುಲಿದ್ದು, ಕಂಡುಬಂದಿದ್ದು, ಅವರನ್ನು ಹೋಮ್ ಐಸೋಲೇಷನ್‍ದಲ್ಲಿ ಇಟ್ಟು ನಿಗಾ ವಹಿಸಲಾಗುತ್ತಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲಿಸದ 80,601 ಜನರಿಗೆ ಒಟ್ಟು 77.62 ಲಕ್ಷ ರೂ.ಗಳ ದಂಡ ವಿಧಿಸಿ 29 ಪ್ರಕರಣ ದಾಖಲಿಸಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘನೆಯಡಿ 7390 ವಾಹನ ಜಪ್ತ ಮಾಡಲಾಗಿದೆ. ಮದುವೆಗಳಿಗೂ ಅನುಮತಿ ನಿಷೇಧಿಸಲಾಗಿರುತ್ತದೆ ಎಂದು ತಿಳಿಸಿದರು.

 ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ಕೋವಿಡ್ ಎರಡನೇ ಅಲೆ ಹಳ್ಳಿಗಳಿಗೂ ಹರಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಬಿವಿವ ಸಂಘದಿಂದ ವೈದ್ಯರನ್ನು ನೀಡಲಾಗಿದ್ದು, ಇಬ್ಬರು ವೈದ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕರನ್ನೊಳಗೊಂಡ ತಂಡವನ್ನು ರಚಿಸಿ ಗ್ರಾಮದ ಜನರ ತಪಾಸಣೆ ಕೈಗೊಳ್ಳಲಾಗುತ್ತಿದೆ. ಕೆಮ್ಮು, ನೆಗಡಿ, ಜ್ವರ ಇದ್ದವರಿಗೆ ಮೆಡಿಷಿನ್ ಕಿಟ್ ನೀಡಲಾಗುತ್ತಿದೆ. ಇದರಿಂದ ಪ್ರಾರಂಭಿಕ ಹಂತದಲ್ಲಿಯೇ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ. ಬರುವ ಜುಲೈ ಮತ್ತು ಅಕ್ಟೋಬರ ಒಳಗಾಗಿ ಎಲ್ಲರಿಗೂ ಲಸಿಕೆ ದೊರೆಯುವಂತೆ ಕೇಂದ್ರ ಸರಕಾರ ಕ್ರಮವಹಿಸುತ್ತಿದೆ ಎಂದು ತಿಳಿಸಿದರು.

 ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share and Enjoy !

Shares