ಕನ್ನಡ ಭಾಷೆಯ ಕಲಿಕೆ ಶಾಲೆಯಲ್ಲಿ ಕಡ್ಡಾಯವಾಗಲಿ ಉಲ್ಲಂಘಿಸಿದ್ದಲ್ಲಿ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್

Share and Enjoy !

Shares

ವಿಜಯನಗರ ವಾಣಿ

ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿಗೂ ಅವಕಾಶವಿಲ್ಲ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡ ಕಲಿಕಾ ಕಡ್ಡಾಯ ಎಂದು ಸಚಿವ ಸುರೇಶ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕನ್ನಡ ಕಲಿಕಾ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಸಹ ಈ ಸಂಬಂಧ ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು  ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದು ಸುರೇಶ್ ಕುಮಾರ್  ಸ್ಪಷ್ಟಪಡಿಸಿದ್ದಾರೆ.

ಪೋಷಕರೂ ತಮ್ಮ ಜವಾಬ್ದಾರಿ ಅರಿತು ಸರ್ಕಾರದ ಸದಾಶಯವನ್ನು ಗೌರವಿಸಬೇಕು:
ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸುತ್ತಿದೆ. ಈ ಕಡ್ಡಾಯ ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದ್ದು, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವಂತಹುದ್ದಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಯಾವುದೇ ಆಗ್ರಹಕ್ಕೂ ಮಣಿಯದೇ ಕಟ್ಟುನಿಟ್ಟಾಗಿ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಕಲಿಸುವುದಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಸದಾಶಯವನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಿಸಬೇಕು. ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೂ ಸಹ ಯಾವುದೇ ಆಗ್ರಹಗಳಿಗೆ ಮಣಿಯದೇ ಮತ್ತು ಕನ್ನಡ ಕಲಿಕೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಒಳಗಾಗದೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಥಮ, ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರೆಸಬೇಕು. ಇಲ್ಲವಾದಲ್ಲಿ ಈ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

Share and Enjoy !

Shares