ಕೊಪ್ಪಳ: ಬಕ್ರೀದ್ ಹಬ್ಬವನ್ನು ಸಮುದಾಯದ ಬಾಂಧವರು ಸರ್ಕಾರದ ಮಾರ್ಗಸೂಚಿಯನ್ವಯ ಶಾಂತಿಯುತವಾಗಿ ಹಾಗೂ ಸೌಹಾರ್ದತೆಯಿಂದ ಆಚರಿಸಿ, ಅನಗತ್ಯ ಗಲಭೆಗಳಿಗೆ ಆಸ್ಪದ ಕೊಡಬೇಡಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಮುದಾಯದವರಲ್ಲಿ ಮನವಿ ಮಾಡಿದರು. ಶನಿವಾರದಂದು(ಜು.17) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 21 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಕುರಿತಾಗಿ ಆಯೋಜಿಸಲಾಗಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಕ್ರೀದ್ ಹಬ್ಬವನ್ನು ಆಚರಿಸಲು ರಾಜ್ಯ ಸರ್ಕಾರ ಈಗಾಗಲೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅವುಗಳನ್ನು ಸಮುದಾಯದವರು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಸೀದಿ ಸಾಮಥ್ರ್ಯದಲ್ಲಿ ಶೇ.50 ರಷ್ಟು ಜನರು ಮಾತ್ರ ಸೇರಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಹೊಂದಿರಬೇಕು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವುದರಿಂದ ರಾಜ್ಯದಲ್ಲಿ ಎಲ್ಲ ದನ, ಕರು, ಒಂಟೆಗಳು, 13 ವರ್ಷದೊಳಗಿನ ಎಮ್ಮೆ, ಕೋಣಗಳನ್ನು ಅಕ್ರಮ ಸಾಗಾಣಿಕೆ ಹಾಗೂ ವಧೆ ಮಾಡುವುದನ್ನು ನಿಷೇಧಿಸಿದೆ. ಜಿಲ್ಲೆಯಲ್ಲಿಯೂ ಈ ನಿಷೇಧ ಜಾರಿಯಲ್ಲಿರುವುದರಿಂದ ಯಾರೂ ಇಂತಹ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಬಾರದು. ಇಂತಹ ಪ್ರಕರಣ ಕಂಡುಬಂದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ತೆಗದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಅಧಿಕೃತ ಪ್ರಾಣಿ ವಧಾಗಾರಗಳಿಲ್ಲ. ಅಗತ್ಯವಿದ್ದಲ್ಲಿ ತಾತ್ಕಾಲಿಕ ವಾಧಾಗಾರ ನಿರ್ಮಿಸುವ ಸಂದರ್ಭದಲ್ಲಿ ಸ್ಥಳೀಯ ತಹಶೀಲ್ದಾರರು ಹಾಗೂ ಮುಖ್ಯಾಧಿಕಾರಿ, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಸ್ಥಳದಲ್ಲಿ ವ್ಯವಸ್ಥಿತ ತಾತ್ಕಾಲಿಕ ವಧಾಗಾರವನ್ನು ನಿರ್ಮಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ ಉಪ ವಿಭಾಗಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಿರ್ಮಾಣಗೊಂಡ ತಾತ್ಕಾಲಿಕ ವಧಾಗಾರಗಳಲ್ಲಿ ಪಶು ಪಾಲನಾ ಇಲಾಖೆಯ ವೈದ್ಯರು ಇರುವುದು ಕಡ್ಡಾಯ. ಮಸೀದಿ ಸೇರಿದಂತೆ ಪ್ರಾರ್ಥನಾ ಸ್ಥಳಗಳಲ್ಲಿ ಕೊವಿಡ್-19 ಅಂಗವಾಗಿ ಮುನ್ನೆಚ್ಚರಿಕೆಯಾಗಿ 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷದ ಕೆಳಗಿನ ಮಕ್ಕಳು ಪ್ರವೇಶ ಮಾಡದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ ಕೋವಿಡ್ ಲಕ್ಷಣಗಳುಳ್ಳ ವ್ಯಕ್ತಿಗಳನ್ನು ಸೋಂಕು ಹರಡುವಿಕೆ ನಿಯಂತ್ರಣ ಉದ್ದೇಶದಿಂದ ಪ್ರಾರ್ಥನಾ ಸ್ಥಳಗಳಿಗೆ ಅನುಮತಿಸಬಾರದು. ಅಂತವರಿಗೆ ನಿಮ್ಮ ಮಟ್ಟದಲ್ಲಿಯೇ ಸೂಕ್ತ ತಿಳುವಳಿಕೆ ನೀಡುವುದರ ಮೂಲಕ ಮನೆಯಿಂದ ಹೊರಬಾರದಂತೆ ನೋಡಿಕೊಳ್ಳಬೇಕು. ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಅವರು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ಮಾತನಾಡಿ, ಜುಲೈ 21 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಅಂಗವಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಅನುಸರಿಸಬೇಕು. ಪ್ರಾಣಿ, ಜಾನುವಾರುಗಳ ಅಕ್ರಮ ಸಾಗಾಟ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಚೆಕ್ಪೋ ಸ್ಟ್ಗಳನ್ನು ಸ್ಥಾಪಿಸಲಾಗಿದೆ. ಹಬ್ಬದ ದಿನದಂದು ಎಲ್ಲ ಸಮುದಾಯದವರು ಸೌಹಾರ್ದತೆಯಿಂದ ಬಕ್ರೀದ್ ಆಚರಣೆಗೆ ಸಹಕರಿಸಬೇಕು. ಉದ್ದೇಶ ಪೂರಿತ ಅಥವಾ ವ್ಯಕ್ತಿಗತ ಆರೋಪ, ಗಲಭೆಗಳಿಗೆ ಯಾರೂ ಪ್ರತಿಕ್ರಿಯಿಸಬಾರದು. ಒಂದು ಸಮುದಾಯದ ಭಾವನೆಗಳನ್ನು ಇನ್ನೊಂದು ಸಮುದಾಯದವರು ಕೆರಳಿಸುವ ಪ್ರಯತ್ನ ಮಾಡಬಾರದು. ಈ ಕುರಿತು ಜಿಲ್ಲೆಯಾದ್ಯಂತ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ಆದಾಗ್ಯೂ ಗಲಭೆ ಉಂಟು ಮಾಡುವ ಉದ್ದೇಶದಿಂದ ಯಾರಾದರೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಲ್ಲಿ ಈ ಕುರಿತು ಹತ್ತಿರದ ಪೊಲೀಸ್ ಠಾಣೆಗೆ, ಸಹಾಯವಾಣಿ ಸಂಖ್ಯೆ; 112 ಗೆ ಅಥವಾ ಜಿಲ್ಲಾ ಕಂಟ್ರೋಲ್ ರೂಂ ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ ಗಲಭೆ ನಿಯಂತ್ರಣದಲ್ಲಿ ಯಾವುದೇ ಇಲಾಖೆಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಲ್ಲಿ ಅವರಿಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಜಿಲ್ಲೆಯಾದ್ಯಂತ ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಇಲಾಖೆಯಿಂದ ಎಲ್ಲ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಮುದಾಯದವರು ಇಲಾಖೆಯೊಂದಿಗೆ ಸಹಕರಿಸಿ, ಶಾಂತಿ-ಸೌಹಾರ್ದತೆ ಯಿಂದ ಹಬ್ಬವನ್ನು ಆಚರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರಾದ ಡಾ. ನಾಗರಾಜ ಎಚ್. ಮಾತನಾಡಿ, ಗೋ ಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಸಾಗಾಣಿಕೆ, ವಧೆ ಮುಂತಾದವುಗಳ ಕುರಿತು ಇರುವ ನಿಯಮಗಳು ಹಾಗೂ ದಂಡನೆಗಳ ಬಗ್ಗೆ ಮಾಹಿತಿ ನೀಡಿದರು.
ಗಂಗಾವತಿ, ಕಾರಟಗಿ, ಕುಷ್ಟಗಿ, ಕೊಪ್ಪಳ, ಯಲಬುರ್ಗಾ ಸೇರಿದಂತೆ ಎಲ್ಲ ತಾಲ್ಲೂಕುಗಳ ಸಮುದಾಯದ ಮುಖಂಡರು ಮಾತನಾಡಿ, ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ, ಶಾಂತಿಯಿಂದ ಬಕ್ರೀದ್ ಆಚರಿಸಲಾಗುವುದು. ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ, ಸರ್ಕಾರದ ನಿಯಮಗಳಿಗೆ ಬದ್ಧವಾಗಿರುತ್ತೇವೆ ಎಂದು ಒಮ್ಮತದ ಸಮ್ಮತಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನುಮ್, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಡಿವೈಎಸ್ಪಿಗಳಾದ ರುದ್ರೇಶ ಉಜ್ಜನಕೊಪ್ಪ, ಗೀತಾ ಬೇನಾಳ ಸೇರಿದಂತೆ ಪೊಲೀಸ್ ಇಲಾಖೆಯ ಇತರೆ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.