ಅನಿಷ್ಟ ಪದ್ದತಿಗಳನ್ನು ಹೋಗಲಾಡಿಸಲು ಕೈಜೋಡಿಸಬೇಕು

Share and Enjoy !

Shares

ಶಿವಮೊಗ್ಗ, ಮಾರ್ಚ್ 07: ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯಂತಹ ಅನಿಷ್ಟ ಪದ್ದತಿಯನ್ನು ಹೋಗಲಾಡಿಸಲು ಎಲ್ಲಾ ಇಲಾಖೆಗಳು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳಿಗೆ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆಯು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿಯಾಗಿದೆ. ಮಹಿಳ ಮತ್ತು ಮಕ್ಕಳು ಈ ರೀತಿ ಅಪಾಯದಲ್ಲಿರುವುದು ಕಂಡು ಬಂದಲ್ಲಿ ದೂರು ನೀಡುವ ಮತ್ತು ಅವರ ಸಹಾಯಕ್ಕೆ ಬರುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕೆಂದರು.

ಮತದಾನ ನಮ್ಮೆಲ್ಲರ ಹಕ್ಕು. ಮತದಾನದ ಮಹತ್ವದ ಕುರಿತು ಜಾಗೃತಿ ಬಹಳ ಮುಖ್ಯ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿ, ಮಹಿಳಾ ರಕ್ಷಣೆ ಸಮಾಜದಲ್ಲಿ ದೊಡ್ಡ ಪ್ರಶ್ನೆಯಾಗಿದೆ ಮಹಿಳಾ ರಕ್ಷಣೆ ಮಾಡುವ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸುವುದರಿಂದ ಮಾತ್ರ ಮಹಿಳೆಯರ ರಕ್ಷಣೆ ಸಾಧ್ಯ ಎಂದ ಅವರು ಉತ್ತಮ ಸಮಾಜ ಸೃಷ್ಠಿಸುವಲ್ಲಿ ಮಹಿಳೆಯರ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಿ ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಷನ್ ಪಿಂಟೋ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ಅನಿಷ್ಟ ಪದ್ಧತಿಯಾಗಿದ್ದು ಇದನ್ನು ತೊಡೆಯುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು.

ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಾನ್ಸಿ ಲವೀನ್ ಪಿಂಟೊ ಹಾಗೂ ಮಹಾನಗರಪಾಲಿಕೆ ಸಹಾಯಕ ನಿರ್ದೇಶಕಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಸುಪ್ರಿಯ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾಹಿತಿ ನೀಡಿದರು. .

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಜಿ.ಜಿ.ಸುರೇಶ್ ಸ್ವಾಗತಿಸಿದರು.       ಕಾರ್ಯಕ್ರಮದಲ್ಲಿ  ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೆÇಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸ್ವಾಧಾರ ಸಾಂತ್ವನ ಕೇಂದ್ರ, ಉಜ್ವಲ ಕೇಂದ್ರ ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆಯ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share and Enjoy !

Shares