ಬಳ್ಳಾರಿ :ಇಂದು ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ಸಪ್ತಾಹ ಹಿನ್ನೆಲೆಯಲ್ಲಿ ಬಳ್ಳಾರಿ ಪದವಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜುಗಳಲ್ಲಿ ಈ ವರ್ಷದ ಪ್ರವೇಶಾತಿ ಸಂಖ್ಯೆಯು ಕುಸಿದಿದೆ. ಈ ಪರಿಸ್ಥಿತಿಗೆ 2020ರಲ್ಲಿ ಕಳೆದ ಸರ್ಕಾರ ತಂದ ಹೊಸ ಶಿಕ್ಷಣ ನೀತಿ ಎನ್.ಇ.ಪಿ-2020 ರ ಧಿಡೀರ್ ಹೇರಿಕೆಯೇ ಪ್ರಮುಖ ಕಾರಣವೆಂದು ಎಐಡಿಎಸ್ಓ ಅಭಿಪ್ರಾಯ ಪಡುತ್ತದೆ. – ರವಿಕಿರಣ್.ಜೆ.ಪಿ, ಜಿಲ್ಲಾ ಅಧ್ಯಕ್ಷರು, ಎಐಡಿಎಸ್ಓ.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡಿದ ಸರ್ಕಾರಿ ಕಾಲೇಜುಗಳಲ್ಲಿನ ಶುಲ್ಕ ಏರಿಕೆ, ಸರ್ಕಾರಿ ಸಂಸ್ಥೆಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿ ಮಾಡುತ್ತಿರುವುದು ಎನ್.ಇ.ಪಿಯ ಒಂದು ಭಾಗವಾಗಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದಲೇ ದೂರ ಉಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಿದ್ಯಾರ್ಥಿ ವೇತನ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೂಕ್ತ ಬಸ್ ಹಾಗೂ ಹಾಸ್ಟೆಲ್ ಸೌಲಭ್ಯವಿಲ್ಲದಿರುವುದು, ಸಮರ್ಪಕವಾಗಿ ತರಗತಿಗಳನ್ನು ನಡೆಸಲು ಶಿಕ್ಷಕರ ಕೊರತೆ ಇವೆಲ್ಲವೂ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ತಿಲಾಂಜಲಿ ಇಡುತ್ತಿವೆ. ಇಂತಹ ಪರಿಸ್ಥಿತಿಯಿಂದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವನ್ನು ಹಸನಾಗಿಸುವ ತುರ್ತು ಅವಶ್ಯಕತೆಯಿದೆ ಎಂದರು.
ಬೇಡಿಕೆಗಳು :
೧. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ. ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಿ.
೨. ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿ!!
೩. ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಖಾತ್ರಿಪಡಿಸಿ ಶುಲ್ಕ ವಿನಾಯಿತಿಯನ್ನು ಪ್ರವೇಶಾತಿ ಸಂದರ್ಭದಲ್ಲಿಯೇ ಒದಗಿಸಿ.
೪. ಎನ್.ಈ.ಪಿ. ೨೦೨೦ರ ಅಪ್ರಜಾತಾಂತ್ರಿಕ ಹೇರಿಕೆಯನ್ನು ಹಿಂಪಡೆಯಿರಿ!!
೫. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿ ಮಾಡುವ ಪ್ರಸ್ತಾವನೆಯನ್ನು ಕೈಬಿಡಿ!!
೬. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ.
ಪ್ರತಿಭಟನೆಯ ಅಧ್ಯಕ್ಷತೆ ಎಐಡಿಎಸ್ಓ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರು ಎಂ. ಶಾಂತಿ ಅವರು ವಹಿಸಿದ್ದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ಈರಣ್ಣ, ಸೆಕ್ರೆಟರಿಯೇಟ್ ಸದಸ್ಯರು ಅನುಪಮ, ಸಿದ್ದು, ಉಮಾ ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.