ಬಳ್ಳಾರಿ,ಅ.16
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅಕ್ಟೋಬರ್ 27, 30 ಹಾಗೂ ನವೆಂಬರ್ 03 ರಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೊಳಪಡುವ ಸಂಪೂರ್ಣ ಕ್ಷೇತ್ರದಲ್ಲಿ “ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ” ಆಯೋಜಿಸಲಾಗುತ್ತಿದ್ದು, ಹೊಸದಾಗಿ ಮತ್ತು ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತಾ ದಿನಾಂಕ 01.11.2025 ಕ್ಕೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ.
ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ಸಿದ್ಧಪಡಿಸುವ ವೇಳಾ ಪಟ್ಟಿಯನ್ವಯ ದಿನಾಂಕ: 01.10.2025 ರಿಂದ 06.11.2025 ರವರೆಗೆ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಅರ್ಹ ಮತದಾರರ ನೋಂದಣಿಗಾಗಿ ಅವಕಾಶ ಕಲ್ಪಿಸಲಾಗಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ನೋಂದಣಿಗಾಗಿ ನಮೂನೆ-19 ರ ಅರ್ಜಿಗಳು ಸ್ವೀಕೃತಿವಾಗದ ಕಾರಣ ಈ ನೋಂದಣಿ ಪ್ರಕ್ರಿಯೆಯ ಕಾರ್ಯವೇಗವನ್ನು ತೀವ್ರಗತಿಯಲ್ಲಿ ಚುರುಕುಗೊಳಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ, ಅವರ ಹೆಸರನ್ನು ನೋಂದಾಯಿಸಿ, ಯಾವೊಬ್ಬ ಅರ್ಹ ಮತದಾರರು ನೋಂದಣಿ ಪ್ರಕ್ರಿಯೆಯಿಂದ ಹೊರಗಿರದೇ, ಅಂಥವರನ್ನು ನೋಂದಾಯಿಸಿ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಲಾಗುತ್ತದೆ.
ಮೇಲ್ಕಂಡ ವಿಶೇಷ ಮಿಂಚಿನ ನೋಂದಣಿ ಅಭಿಯಾನಗಳ ದಿನಾಂಕಗಳAದು ಮಹಾನಗರ ಪಾಲಿಕೆಯ ಆಯುಕ್ತರು, ತಹಶೀಲ್ದಾರರು ಹಾಗೂ ಸಹಾಯಕ ಮತದಾನ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಗೊಳಪಡುವ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಸೇವೆ ಪಡೆದು, ಅವರೊಂದಿಗೆ ಉಪ-ತಹಶೀಲ್ದಾರರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳ ತಂಡಗಳನ್ನು ರಚಿಸಿ (ಅವಶ್ಯಕತೆಗನುಗುಣವಾಗಿ), ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರನ್ನು ಕಚೇರಿ ಮುಖ್ಯಸ್ಥರ ಮೂಲಕ ಸಂರ್ಪಕಿಸಿ ಬೆಳಿಗ್ಗೆ 10 ರಿಂದ ಸಂಜೆ 05.30 ರವರೆಗೆ ನಿಯಮಾನುಸಾರ ನಮೂನೆ-19 ರ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಸ್ವೀಕರಿಸಲಿದ್ದಾರೆ.
ಆಯಾ ಜಿಲ್ಲಾಧಿಕಾರಿಗಳು ಪ್ರತಿ ತಾಲ್ಲೂಕಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಈ ವಿಶೇಷ ಮಿಂಚಿನ ನೋಂದಣಿ ಅಭಿಯಾನದ ಮೇಲುಸ್ತುವಾರಿಯ ನೋಡಲ್ ಅಧಿಕಾರಿಯೆಂದು ನೇಮಿಸಿ ಆದೇಶ ಹೊರಡಿಸಬೇಕು. ಜಿಲ್ಲಾ ವ್ಯಾಪ್ತಿಗೆ ಜಿಲ್ಲಾಧಿಕಾರಿ ಹಾಗೂ ಉಪ-ವಿಭಾಗ ವ್ಯಾಪ್ತಿಗೆ ಸಹಾಯಕ ಆಯುಕ್ತರು ಈ ವಿಶೇಷ ಮಿಂಚಿನ ನೋಂದಣಿ ಅಭಿಯಾನದ ಮೇಲುಸ್ತುವಾರಿ ವಹಿಸಬೇಕು ಎಂದು ನಿರ್ದೇಶಿಸಿದ್ದಾರೆ.
ಅರ್ಹ ಮತದಾರರನ್ನು ಗುರುತಿಸಿ, ಅವರ ಹೆಸರನ್ನು ನೋಂದಾಯಿಸಿ, ಅರ್ಹ ಮತದಾರರು ಈ ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂಬುದೇ ಈ ಮತದಾರರ ಪಟ್ಟಿಯ ವಿಶೇಷ ಮಿಂಚಿನ ನೋಂದಣಿ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಈ ಸಂಪೂರ್ಣ ಮಿಂಚಿನ ನೋಂದಣಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.