Ad image

ಬಳ್ಳಾರಿಯಲ್ಲಿ ಸಂಭ್ರಮದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ 1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ: ಶಾಸಕ ನಾರಾ ಭರತ್ ರೆಡ್ಡಿ

Vijayanagara Vani
ಬಳ್ಳಾರಿಯಲ್ಲಿ ಸಂಭ್ರಮದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ 1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ,ಅ.07
ನಗರದ ವಾಲ್ಮೀಕಿ ವೃತ್ತ(ಎಸ್.ಪಿ ವೃತ್ತ)ದಲ್ಲಿ 1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಹಾಗೂ ವೃತ್ತವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬಳ್ಳಾರಿ ನಗರ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಹಸ್ತ ವಿನ್ಯಾಸದಲ್ಲಿ ಪುತ್ಥಳಿಯು ಅರಳಲಿದೆ. ಶುಭದಿನದಂದು ರಾಜ್ಯದ ವಿವಿಧ ಭಾಗಗಳಿಂದ ಸಮುದಾಯದ ಜನರನ್ನು ಒಗ್ಗೂಡಿಸಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಅದೇರೀತಿಯಾಗಿ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಶಾಖಾ ಮಠ ಸ್ಥಾಪಿಸಲಾಗುವುದು. ಇದಕ್ಕಾಗಿ ವೈಯಕ್ತಿಕವಾಗಿ ಎರಡು ಎಕರೆ ಭೂಮಿ ನೀಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ರಾಮಾಯಣ ಎಂದರೆ ಒಂದು ರೋಮಾಂಚನಕಾರಿ ಗ್ರಂಥ. ಜೀವನದಲ್ಲಿ ಪ್ರತಿಯೊಬ್ಬರು ಒಮ್ಮೆಯಾದರೂ ಓದಬೇಕು ಎಂದು ನುಡಿದರು.
ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಚಿಸಿದಂತಹ ರಾಮಾಯಣ ಕೃತಿಯು ದೇಶದಲ್ಲಿಯೇ ಸರ್ವಶ್ರೇಷ್ಠ ಗ್ರಂಥವಾಗಿದೆ. ಒಟ್ಟು 24,000 ಶ್ಲೋಕಗಳನ್ನು ಕಾಣಬಹುದಾಗಿದೆ ಎಂದರು.
ರಾಜ್ಯ ಸರ್ಕಾರ ಜಾರಿತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಸಬಲೀಕರಣ ಹೊಂದುತ್ತಿದ್ದೇವೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಸಮುದಾಯ ಅಭಿವೃದ್ಧಿ ಹೊಂದಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಕರೆ ನೀಡಿದರು.
ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಋಷಿ ಮತ್ತು ಕವಿ ಮಹರ್ಷಿ ವಾಲ್ಮೀಕಿ ಅವರ ಮಹಾಕಾವ್ಯವಾದ ರಾಮಾಯಣದ ಮೂಲಕ ಧರ್ಮಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಅವರನ್ನು ಪೂಜಿಸಲಾಗುತ್ತದೆ. ರಾಮಾಯಣ ಕೃತಿಯಲ್ಲಿನ ಪಾತ್ರಧಾರಿಗಳ ಉತ್ತಮ ಅಂಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ ಸತ್ಯವು ಸದಾಚಾರ ಮತ್ತು ಧರ್ಮದ ಅಡಿಪಾಯ. ಧರ್ಮ ಎಂದರೆ ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯನ್ನು ಗೌರವಿಸುವುದು ಎಂದು ತೋರ್ಪಡಿಸುತ್ತದೆ. ಸತ್ಯವಂತ ಜೀವನವು ಶಾಂತಿ ಮತ್ತು ದೈವಿಕ ಅನುಗ್ರಹಕ್ಕೆ ಕಾರಣವಾಗುತ್ತದೆ. ಹಾಗಾಗಿ ಮಹರ್ಷಿ ವಾಲ್ಮೀಕಿಯವರ ಜೀವನದ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದರು.
ರಾಜ್ಯ ಸರ್ಕಾರವು ಮಹನೀಯರ ಜೀವನದ ನಡೆ-ನುಡಿ ಮತ್ತು ಅವರ ಆದರ್ಶಪ್ರಾಯಗಳನ್ನು ಈಗಿನ ಪೀಳಿಗೆಗೆ ತಿಳಿಸಲು ಜಯಂತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ಪ್ರತಿಯೊಬ್ಬರೂ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಾತ್ರ ಮಹನೀಯರಿಗೆ ಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ.ವೀರಭದ್ರಪ್ಪ ತಂಬ್ರಳ್ಳಿ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಹರ್ಷಿ ವಾಲ್ಮೀಕಿ ತ್ರೇತಾಯುಗದಲ್ಲಿ ಜನಿಸಿದವರು. ರತ್ನಾಕರನಾಗಿ ಜನಿಸಿದ ಋಷಿ ವಾಲ್ಮೀಕಿಯ ಜೀವನವು ನಾರದ ಋಷಿಯನ್ನು ಭೇಟಿಯಾದ ನಂತರ ಅವರನ್ನು ತಪಸ್ಸಿಗೆ ಕರೆದೊಯ್ದಾಗ ನಂತರ ತಿರುವು ಪಡೆದು ಅಂತಿಮವಾಗಿ ಮಹಾನ್ ಕವಿಯಾದವರು ಎಂದು ತಿಳಿಸಿದರು.
ವಾಲ್ಮೀಕಿಯವರ ರಾಮಾಯಣ ಕೃತಿಯಿಂದ ಭಾರತೀಯ ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ವಾಲ್ಮೀಕಿಯ ಬೋಧನೆಗಳು ರಾಮನ ಮೌಲ್ಯಗಳನ್ನು ಉತ್ತೇಜಿಸುತ್ತವೆ, ಸತ್ಯ, ಕರ್ತವ್ಯ ಮತ್ತು ಕರುಣೆಯನ್ನು ಒತ್ತಿಹೇಳುತ್ತವೆ ಎಂದರು.
ಮಹರ್ಷಿ ವಾಲ್ಮೀಕಿಯವರ ಸಂಪೂರ್ಣ ಜೀವನವು ದುಷ್ಟ ಕಾರ್ಯಗಳನ್ನು ತ್ಯಜಿಸಲು ಮತ್ತು ಒಳ್ಳೆಯ ಕಾರ್ಯಗಳು ಹಾಗೂ ಭಕ್ತಿಯ ಮಾರ್ಗವನ್ನು ಅನುಸರಿಸಲು ದಾರಿ ಮಾಡಿಕೊಡುತ್ತದೆ. ಈ ಮಹಾನ್ ವ್ಯಕ್ತಿಯ ಸಂದೇಶವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿಭಾಗದಲ್ಲಿ ಅತ್ಯುತ್ತಮ ಅಂಕಗಳಿಸಿದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕೃಷಿ, ತೋಟಗಾರಿಕೆ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಸನ್ಮಾನಿಸಲಾಯಿತು. ಕಲೆ, ಸಾಹಿತ್ಯ-ಸಂಗೀತ ಕ್ಷೇತ್ರದಲ್ಲಿನ ಪರಿಣಿತರನ್ನು ಅಭಿನಂದಿಸಲಾಯಿತು.
*ಜಿಲ್ಲಾಡಳಿತದಿಂದ ಪುಷ್ಪನಮನ:*
ಜಯಂತಿ ಅಂಗವಾಗಿ ನಗರದ ಎಸ್.ಪಿ ವೃತ್ತದ ಬಳಿಯ ಮತ್ತು ವಾಲ್ಮೀಕಿ ಭವನದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಗೆ ಜಿಲ್ಲಾಡಳಿತದಿಂದ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆಗೈಯ್ಯಲಾಯಿತು.
*ಅದ್ದೂರಿ ಮೆರವಣಿಗೆ:*
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ಜರುಗಿತು. ನಗರದ ಎಸ್.ಪಿ ವೃತ್ತ(ವಾಲ್ಮೀಕಿ ವೃತ್ತ) ದಲ್ಲಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಅವರು ಬಾವುಟ ತೋರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ನಗರದ ಎಸ್.ಪಿ ವೃತ್ತದಿಂದ ಆರಂಭವಾಗಿ ಕನಕದುರ್ಗಮ್ಮ ದೇವಸ್ಥಾನ- ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆ- ಜೈನ್ ಮಾರ್ಕೆಟ್ ರಸ್ತೆ- ಹೆಚ್.ಆರ್.ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ಮುಂಭಾಗದಿದ ವಾಲ್ಮೀಕಿ ಭವನದ ವೇದಿಕೆ ಕಾರ್ಯಕ್ರಮದವರೆಗೆ ಸಾಗಿಬಂದು ಸಂಪನ್ನಗೊಡಿತು.
ಮೆರವಣಿಗೆಯಲ್ಲಿ ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಒಳಗೊಂಡು ಸಾಗಿಬಂದ ಬೆಳ್ಳಿರಥ ಪ್ರಮುಖ ಆಕರ್ಷಣೆಯಾಗಿತ್ತು. ರಾಮಾಯಣ ಕಥಾಸಂಗ್ರಹದ ಪಾತ್ರ-ವೇಷಧಾರಿಗಳನ್ನೊಳಗೊಂಡ ಕಲಾತಂಡ, ಡೊಳ್ಳು ಕುಣಿತ, ತಾಷೆ ರಾಂಡೋಲ್ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಇನ್ನಷ್ಟು ಮೆರಗು ನೀಡಿದವು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜದ ಹಿರಿಯ ಮುತ್ಸದ್ದಿ ಜಿ.ರುದ್ರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪಾಲಿಕೆಯ ಸದಸ್ಯರು, ಜಿಲ್ಲೆಯ ವಿವಿಧ ಸಂಘ-ಸ0ಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
————–

Share This Article
error: Content is protected !!
";