ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿಗೆ ಮೇ. 01 ರಿಂದ ಮತ ಚಲಾವಣೆಗೆ ಅವಕಾಶ

Vijayanagara Vani
ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿಗೆ ಮೇ. 01 ರಿಂದ ಮತ ಚಲಾವಣೆಗೆ ಅವಕಾಶ

ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯ ನಿಮಿತ್ಯ ಮೇ. 07 ಮತದಾನ ದಿನದಂದು ಚುನಾವಣೆ ಸಂಬಂಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳಿಗೆ ಮೇ. 01 ರಿಂದ 06 ರವರೆಗೆ  ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಇದಕ್ಕಾಗಿ ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಫೆಸಿಲಿಟೇಶನ್ ಸೆಂಟರ್ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಚುನಾವಣೆ ನಿಮಿತ್ಯ ಮೇ. 07 ರಂದು ಮತದಾನ ನಡೆಯಲಿದ್ದು, ಅಂದು ಚುನಾವಣಾ ಕರ್ತವ್ಯ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಅವಕಾಶ ಕಲ್ಪಿಸಿದೆ.
ಮತದಾನ ದಿನದಂದು ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ಪೊಲೀಸ್, ಆರೋಗ್ಯ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಸ್ವಚ್ಛತಾ ಕಾರ್ಯದಲ್ಲಿ ನಿರತರಾಗುವವರು, ಇಲಾಖಾ ವಾಹನ ಚಾಲಕರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮತವನ್ನು ಮೇ. 01 ರಿಂದ 06 ರವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.  ಅಂತಹ ಮತದಾರರನ್ನು ಈಗಾಗಲೆ ಗುರುತಿಸಲಾಗಿದೆ.  ಬೇರೆ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮತವಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವಂತಹ ಅಧಿಕಾರಿ, ಸಿಬ್ಬಂದಿಗಳಿಗೆ ವ್ಯವಸ್ಥೆ ಅನುಕೂಲಕರವಾಗಿದೆ.  ಮತದಾನ ದಿನದಂದು ಕರ್ತವ್ಯ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮತವನ್ನು ತರಬೇತಿ ನಡೆಯುವ ಸ್ಥಳದಲ್ಲಿಯೇ ಮತ ಚಲಾಯಿಸಲು ಕೂಡ ವ್ಯವಸ್ಥೆ ಮಾಡಿಕೊಡಲಾಗಿದೆ.
ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನ ದಿನದಂದು ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮತ ಚಲಾಯಿಸಲು ಚುನಾವಣಾ ಆಯೋಗದಿಂದ ಮಾಡಲಾಗಿರುವ ವಿಶೇಷ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು, ಎಲ್ಲರೂ ತಪ್ಪದೆ ತಮ್ಮ ಮತ ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!