ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಮರಗಿಡಗಳನ್ನು ಬೆಳೆಸಲು ಮುಂದಾಗಿ: ನ್ಯಾಯಾಧೀಶರಾದ ಜಗಧೀಶ್ವರ

Vijayanagara Vani
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಮರಗಿಡಗಳನ್ನು ಬೆಳೆಸಲು ಮುಂದಾಗಿ: ನ್ಯಾಯಾಧೀಶರಾದ ಜಗಧೀಶ್ವರ

ರಾಯಚೂರು,ಜೂ.5 ಪ್ರಸ್ತುತ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದಾಗಿ ಕಾಂಕ್ರಿಟ್ ನಾಡು ನಿರ್ಮಾಣವಾಗಿತ್ತಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬೇಕಾದರೆ ಪ್ರತಿಯೊಬ್ಬರು ಮರಗಳನ್ನು ಬೆಳೆಸಲು ಮತ್ತು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಮುಂದಾಗಬೇಕು ಎಂದು ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಗಧೀಶ್ವರ.ಎಂ ಅವರು ಹೇಳಿದರು.
ಅವರು ಜೂ.೫ರ(ಬುಧವಾರ) ನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ನ್ಯಾಯಾಲಯ ಕಟ್ಟಡದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಪ್ರತಿ ತಾಲೂಕಿನ ನ್ಯಾಯಾಲಯದಲ್ಲಿ10ಸಾವಿರ ಗಿಡಗಳನ್ನು ಬೆಳೆಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಾಗಿದ್ದು, ಇದರಿಂದ ಪರಿಸರ ಸಂರಕ್ಷಣೆಗೆ ಅನುಕೂಲವಾಗಲಿದೆ. ಆದ್ದರಿಂದ ಮಳೆಗಾಲ ಮುಗಿಯುವುದರ ಒಳಗಾಗಿ ಜಿಲ್ಲೆಯ ಪ್ರತಿ ತಾಲೂಕಿನ ನ್ಯಾಯಾಲಯಗಳಲ್ಲಿ 10 ಸಾವಿರ ಸಸಿಗಳಂತೆ ಬೃಹತ್ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾಡುಗಳ ನಾಶ, ಮರಗಳ ನಾಶವಾಗುವುದರಿಂದ ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ, ಮಳೆಯ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ಪ್ರತಿಯೊಬ್ಬರು ಜಾಗೃತರಾಗಿ ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಶ್ರೀಕಾಂತ.ಎಸ್.ವಿ, 2ನೇ ಅಪರ ಜಿಲ್ಲಾ ಮತ್ತು ಅತ್ರ ನ್ಯಾಯಾಧೀಶರಾದ ಹತ್ತಿಕಾಳ್ ಪ್ರಭು ಸಿದ್ದಪ್ಪ, ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿಗಳಾದ ಸಿದ್ದರಾಮಪ್ಪ ಕಲ್ಯಾಣರಾವ್, ೨ನೇ ಹೆಚ್ಚುವರಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶ್ವೇತಾ ಸಿಂಗ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅನಿಲ್ ಶೇಖಣ್ಣನವರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಹುಲುಗಪ್ಪ.ಡಿ, ವಕೀಲರ ಸಂಘದ ಕಾರ್ಯದರ್ಶಿ ಉದಯಕುಮಾರ ಮಾಲ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್, ವಲಯ ಅರಣ್ಯಾಧಿಕಾರಿ ರಾಜೇಶ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!