ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪಾತ್ರ ಮಹತ್ವದ್ದಾಗಿದೆ: ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್

Vijayanagara Vani
ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪಾತ್ರ ಮಹತ್ವದ್ದಾಗಿದೆ: ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್
ಬಳ್ಳಾರಿ,ಜು.06
ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಹೆಣ್ಣು ಮನೆ ಬೆಳಗುತ್ತಾಳೆ ಮತ್ತು ಸಮಾಜವನ್ನು ಬೆಳೆಸುತ್ತಾಳೆ. ಚುನಾವಣೆ, ಪಲ್ಸ್-ಪೆÇಲೀಯೋ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.
*ಪ್ರತಿ ಮಹಿಳೆಯೂ ಮನೆಯ ಯಜಮಾನಿ:*
ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು. *ಅಂಗನವಾಡಿಗಳ ಉನ್ನತೀಕರಣ:*
ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.
*ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು:*
ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. *ಕಳಪೆ ಆಹಾರ ಪೂರೈಕೆಯಾದಲ್ಲಿ ಗಮನಕ್ಕೆ ತನ್ನಿ:*
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟತೆ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲಾಡಳಿತವು ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಿಂದ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ವಿತರಿಸಲಾಗುತ್ತಿದೆ. ಇದೊಂದು ಪ್ರಶಂಸನೀಯ ಕಾರ್ಯವಾಗಿದ್ದು, ಜಿಲ್ಲಾಧಿಕಾರಿಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.
ಬಳ್ಳಾರಿ ನಗರ ಶಾಸಕ ನಾ.ರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳನ್ನು ಬೆಳೆಸುವಲ್ಲಿ, ಬಾಲ್ಯದಲ್ಲಿ ಅವರಿಗೆ ಶಿಕ್ಷಣ ಅಡಿಪಾಯ ಹಾಕುವುದರಲ್ಲಿ ಆಶಾಕಾರ್ಯಕರ್ತೆಯರು, ಸಹಾಯಕಿಯರ ಕರ್ತವ್ಯ ಅವಿಸ್ಮರಣಿಯವಾದುದು ಎಂದರು.
ರಾಜ್ಯ ಸರ್ಕಾರವು ಬಳ್ಳಾರಿ ನಗರ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದೆ. ನಗರದ ಅಭಿವೃದ್ಧಿಗೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ನಗರವು ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದರು.
ಬಳಿಕ ಕಾರ್ಯಕ್ರಮದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ಹಾಗೂ ವಿಕಲಚೇತನರ ತ್ರಿಚಕ್ರ ವಾಹನಗಳು ಮತ್ತು ಪೋಷಣ್ ಆಭಿಯಾನ ಯೋಜನೆಯಡಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ಫೋನ್, ಅಂಗನವಾಡಿ ಕೇಂದ್ರಗಳಿಗೆ ತೂಕದ ಯಂತ್ರ, ಆಶಾ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೀರೆ ವಿತರಿಸಲಾಯಿತು.
ಮುಖ್ಯಮಂತ್ರಿ ಬಾಲಾಸೇವಾ ಯೋಜನೆಯಡಿ ಕೊರೋನಾದಲ್ಲಿ ಮೃತಹೊಂದಿದ ಪಾಲಕರ ಮಕ್ಕಳಿಗೆ ಲ್ಯಾಪ್ಟಾಪ್, ವಿಶೇಷಚೇತನ ಮಕ್ಕಳಿಗೆ ಟಾಕಿಂಗ್ ಲ್ಯಾಪ್ಟಾಪ್, ಬ್ರೈಲ್ಕಿಟ್, ಹೊಲಿಗೆ ಯಂತ್ರ ನೀಡಲಾಯಿತು.
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆಗೈದ 08 ಮಕ್ಕಳನ್ನು ಸನ್ಮಾನಿಸಲಾಯಿತು. ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯಡಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದನಾ ಪತ್ರ ಮತ್ತು ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ.ಜೆ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ಕುಮಾರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!