ರಾಷ್ಟ್ರೀಯ  ಹೆದ್ದಾರಿಯಲ್ಲಿ  ಮಾನವ ಸರಪಳಿ ಜನಸ್ತೋಮದಿಂದ ಮೊಳಗಿದ ಭಾರತ ಮಾತಾಕಿ, ಕನ್ನಡಾಂಬೆ ಜೈ ಘೋಷಣೆ.

Vijayanagara Vani
 ರಾಷ್ಟ್ರೀಯ  ಹೆದ್ದಾರಿಯಲ್ಲಿ  ಮಾನವ ಸರಪಳಿ ಜನಸ್ತೋಮದಿಂದ ಮೊಳಗಿದ ಭಾರತ ಮಾತಾಕಿ, ಕನ್ನಡಾಂಬೆ ಜೈ ಘೋಷಣೆ.

ಪ್ರಜಾಪ್ರಭುತ್ವಕ್ಕಾಗಿ ಕೈ ಜೋಡಿಸಿದ ವಿಜಯನಗರ ಜಿಲ್ಲೆಯ ಜನತೆ
ವಿಜಯನಗರ ಹೊಸಪೇಟೆ ಸೆಪ್ಟೆಂಬರ್ 15 : ವಿಜಯನಗರ ಜಿಲ್ಲೆಯ ಜನರು ನಮ್ಮ ಹೆಮ್ಮೆಯ ಪ್ರಜಾಪ್ರಭುತ್ವ ಬಲಪಡಿಸುವುದಕ್ಕೆ ಕೈ ಜೋಡಿಸಿದರು.. ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ
ಜಯಘೋಷ ಹಾಕಿ ಸಂಭ್ರಮಿಸಿದರು.
ಹೌದು..! ವಿಜಯನಗರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ
ವಿಜಯನಗರ ಜಿಲ್ಲೆಯಲ್ಲಿ ಸೆ.15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮವು ಹೊಸ ಇತಿಹಾಸ ಸೃಷ್ಟಿಸಿತು‌.
ಪೂರ್ವನಿಗದಿಯಂತೆ ಬೆಳಗಿನ ಅವಧಿಯಲ್ಲಿ ಮಾನವ ಸರಪಳಿ ಕಾರ್ಯವು ಮಾರ್ಗದುದ್ದಕ್ಕೂ ಯಶಸ್ವಿಯಾಗಿ ನೆರವೇರಿತು.
ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವ ಕಾರ್ಯಕ್ರಮಕ್ಕೆ ಕೈಜೋಡಿಸಿದರು.
ವಿಜಯನಗರ-ಕೊಪ್ಪಳ ಗಡಿಭಾಗದ
ರಾಷ್ಟ್ರೀಯ ಹೆದ್ದಾರಿಯಲ್ಲಿನ ಟಿ.ಬಿ.ಡ್ಯಾಮ್ ಮೊದಲನೇ ಸೇತುವೆಯಿಂದ ಭುವನಹಳ್ಳಿವರೆಗೆ ಸುಮಾರು 40 ಕಿ.ಮೀ ಉದ್ದ ಮಾನವ ಸರಪಳಿಯನ್ನು ನಿರ್ಮಿಸಿ ವಿಜಯನಗರ ಜಿಲ್ಲೆಯ ಜನರು ಹೊಸ ಇತಿಹಾಸ ಬರೆದರು.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿರಂತರ ಸಭೆ ನಡೆಸಿ ಅಧಿಕಾರಿಗಳ ತಂಡ ರಚಿಸಿ ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದ ಐತಿಹಾಸಿಕ ಮಾನವ ಸರಪಳಿಯಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳು, ಗಣ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲಾ ಸಂಘ ಸಂಸ್ಥೆಗಳು ಪ್ರತಿನಿಧಿಗಳು,
ಕಾರ್ಮಿಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
*ಸಂವಿಧಾನ ಪೀಠಿಕೆ ವಾಚನ:* ಹೊಸಪೇಟೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ
ವೇದಿಕೆ ಕಾರ್ಯಕ್ರಮ ನಡೆಯಿತು.
ಇದೆ ವೇಳೆ, ಸಂವಿಧಾನ ಪೀಠಿಕೆಯ ವಾಚನ ಕಾರ್ಯಕ್ರಮಕ್ಕೆ ಡಾ.ಬಿ. ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಸಸಿಗೆ ನೀರು ಹಾಕುವ ಮೂಲಕ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು,
ಜನಾಡಳಿತ ಜಾರಿಗೊಳಿಸಿದ ಪ್ರಜಾಪ್ರಭುತ್ವವು ಅತ್ಯಂತ ದೊಡ್ಡ ಶಕ್ತಿಯಾಗಿದೆ ಎಂದು ತಿಳಿಸಿದರು.
ಎಲ್ಲರಿಗೂ ಸಮಾನವಾಗಿ ಬದುಕುವ ಸ್ವಾತಂತ್ರ್ಯದ ಹಕ್ಕನ್ನು ಸಂವಿಧಾನ ನೀಡಿದೆ ಎಂದರು. ನಮಗೆ ಬೇಕಾದ
ಮುಖ್ಯಮಂತ್ರಿಗಳು, ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಮಹತ್ವದ ಮತದಾನದ ಹಕ್ಕು ಸಂವಿಧಾನ, ಪ್ರಜಾಪ್ರಭುತ್ವದ ಮೂಲಕ ನಮಗೆ ದಕ್ಕಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿ ಬ್ರಿಟೀಷ್‌ರ ಹಾಗೂ ರಾಜರ ಆಡಳಿತವಿತ್ತು. ಆದರೆ ಜನರ ಆಡಳಿತವಿರಲಿಲ್ಲ. ಪ್ರಜಾಪ್ರಭುತ್ವದಿಂದಲೇ ನಮಗೆ
ಜನಾಡಳಿತ ಸಾಧ್ಯವಾಗಿದೆ. ಸಂವಿಧಾನದಿಂದಾಗಿ ನಮಗೆ ಮಹತ್ವದ ಹಕ್ಕುಗಳು ದೊರೆತಿವೆ. ನಮ್ಮ ಹಕ್ಕಗಳನ್ನು ರಕ್ಷಣೆ ಮಾಡಿಕೊಳ್ಳುವುದರ ಜೊತೆಗೆ ಅವುಗಳನ್ನು ಉಳಿಸಿಕೊಳ್ಳಬೇಕು. ಪ್ರಜಾಪ್ರಭುತ್ವವು ಅತ್ಯಂತ ದೊಡ್ಡ ಶಕ್ತಿಯಾಗಿದ್ದು, ಅದನ್ನು ಯಾರು ಬಿಟ್ಟುಕೊಡಬಾರದು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಮಾತನಾಡಿ, ಸಾರ್ವಜನಿಕರಿಗೆ ವಿಶೇಷವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರವು ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಕಾರ್ಯಕ್ರಮ ರೂಪಿಸಿದೆ.


2500 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮಕ್ಕಾಗಿ ಲಕ್ಷಾಂತರ ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಸಹ ಸಾವಿರಾರು ಸಂಖ್ಯೆಯಲ್ಲಿ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಟಿಬಿ ಡ್ಯಾಂ ನ ಮೊದಲ ಸೇತುವೆಯಿಂದ
ಭುವನಹಳ್ಳಿವರೆಗೆ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಅವರು ಮಾತನಾಡಿ, ರಾಜ್ಯದಲ್ಲಿ ಸುಮಾರು 2500 ಕಿ.ಮೀ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮವು
ಮಹತ್ತರವಾದುದಾಗಿದೆ.
ಈ ಕಾರ್ಯಕ್ರಮಕ್ಕೆ ದಾರಿಯುದ್ದಕ್ಕೂ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಮಾನವ ಸರಪಳಿ ಸಾಲಿನಲಿ ನಿಂತಿರುವುದನ್ನು ಕಂಡು ಸಂತಸವಾಯಿತು ಎಂದು ತಿಳಿಸಿದರು.
ಇದು ಸ್ಪೂರ್ತಿದಾಯಕ ಕಾರ್ಯಕ್ರಮ.
ನಮ್ಮ ಸಂವಿಧಾನ, ನಮ್ಮ ಹಕ್ಕು, ನಮ್ಮ ಪ್ರಜಾಪ್ರಭುತ್ವ ಎಂಬ ಭಾವನೆ ಎಲ್ಲರಲ್ಲಿಯೂ ಮೂಡಬೇಕು ಎಂದು ತಿಳಿಸಿದರು.


ಎಲ್ಲರು ಸಮಾನರಾಗಿ ಬಾಳಬೇಕು ಎನ್ನುವಂತಹ ಸಂದೇಶ ನೀಡಿದ ಸಂವಿಧಾನದ ನಿರ್ಮಾತೃ ಡಾ ಬಿ.ಆರ್.ಅಂಬೇಡ್ಕರ್ ಅವರನ್ನು ನಾವೆಲ್ಲರೂ ಈ ಹೊತ್ತು ಸ್ಮರಿಸೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್ ಅವರು ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭದಲ್ಲಿ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹಲವು ಗಣ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
*ಗಮನ ಸೆಳೆದ ಗಾಂಧಿ, ಅಂಬೇಡ್ಕರ್ ವೇಷಧಾರಿ ಮಕ್ಕಳು:*
ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ ವೇಷ ಧರಿಸಿದ ಮಕ್ಕಳು ಎಲ್ಲರ ಗಮನ ಸೆಳೆದರು.
ಹೊಸಪೇಟೆ ನಗರದ ಡಾ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಂದಿ ಕೋಲು, ಹಗಲು ವೇಷ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡು ಹಬ್ಬದ ವಾತಾವರಣ ಸೃಷ್ಟಿಸಿದ್ದವು. ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಭಾಗಿಯಾಗಿದ್ದರು.

WhatsApp Group Join Now
Telegram Group Join Now
Share This Article
error: Content is protected !!