ಬಳ್ಳಾರಿ; ಹೆಚ್‍ಐವಿ ಸೇರಿದಂತೆ ಇತರೆ ರೋಗಗಳ ಪತ್ತೆ ಹಾಗೂ ಚಿಕಿತ್ಸೆ ನೀಡುವ ಸಂಚಾರಿ ವಾಹನಕ್ಕೆ ಮೇಯರ್ ಮುಲ್ಲಂಗಿ ನಂದೀಶ್ ಚಾಲನೆ

Vijayanagara Vani
ಬಳ್ಳಾರಿ; ಹೆಚ್‍ಐವಿ ಸೇರಿದಂತೆ ಇತರೆ ರೋಗಗಳ ಪತ್ತೆ ಹಾಗೂ ಚಿಕಿತ್ಸೆ ನೀಡುವ ಸಂಚಾರಿ ವಾಹನಕ್ಕೆ ಮೇಯರ್ ಮುಲ್ಲಂಗಿ ನಂದೀಶ್ ಚಾಲನೆ
ಬಳ್ಳಾರಿ,ಜು.12
ಜಿಲ್ಲೆಯಲ್ಲಿ ಹೆಚ್ಐವಿ ಸೋಂಕು ಸೇರಿದಂತೆ ಇತರೆ ರೋಗಗಳನ್ನು ಸಕಾಲದಲ್ಲಿ ಗುರ್ತಿಸಿ ಚಿಕಿತ್ಸೆ ನೀಡುವ ಸಂಚಾರಿ ಜಾಗೃತಿ ವಾಹನಕ್ಕೆ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಮೂಲಕ ಒದಗಿಸಲಾದ ಸುಸಜ್ಜಿತ ಸಂಚಾರಿ ಪ್ರಯೋಗಾಲಯ, ಆಪ್ತಸಮಾಲೋಚನೆ ಹಾಗೂ ಜನಜಾಗೃತಿ ನೀಡಲು ಎಲ್ಇಡಿ ಟಿವಿ ಹೊಂದಿದ ವಾಹನಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ರಾಜ್ಯ ಸರ್ಕಾರವು ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದು, ಜಿಲ್ಲೆಗೆ ಹಸ್ತಾಂತರಿಸಲಾದ ಸುಸಜ್ಜಿತ ವಾಹನವು ಗ್ರಾಮೀಣ ಪ್ರದೇಶ ಒಳಗೊಂಡಂತೆ ನಗರದ ಕೊಳಚೆ ಪ್ರದೇಶಗಳ ಜನತೆಗೆ ಹೆಚ್ಚಿನ ರೀತಿಯಲ್ಲಿ ಸದುಪಯೋಗವಾಗುವಂತೆ ನಿಗಾವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಪ್ರಸ್ತುತ ಜಿಲ್ಲೆಗೆ ಒದಗಿಸಲಾದ ಸಂಚಾರಿ ವಾಹನದಲ್ಲಿ ಸುಸಜ್ಜಿತ ಪ್ರಯೋಗಾಲಯ ಮತ್ತು ಆಪ್ತ ಸಮಾಲೋಚನೆಯ ಪ್ರತ್ಯೇಕ ವಿಭಾಗವಿದ್ದು, ಪ್ರಯೋಗಾಲಯ ತಂತ್ರಜ್ಞರಿಗೆ ಅಗತ್ಯ ವೈದ್ಯಕೀಯ ಪರಿಕರಗಳನ್ನು ವ್ಯವಸ್ಥಿತವಾಗಿ ಕಾಯ್ದಿಟ್ಟುಕೊಳ್ಳಲು ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಸಾರ್ವಜನಿಕರಿಗೆ ವಾಹನದಲ್ಲಿ ಕುಳಿತುಕೊಳ್ಳುವ ಆಸನದ ವ್ಯವಸ್ಥೆಯಿದೆ. ಹೆಚ್ಐವಿ ಸೇರಿದಂತೆ ಇತರೆ ರೋಗಗಳಿಗೆ ಮತ್ತು ವೈಯಕ್ತವಾಗಿ ಕಂಡು ಬರುವ ಕಾಯಿಲೆಗಳಿಗೆ ಆಪ್ತ ಸಮಲೋಚನೆ ಮೂಲಕ ಧೈರ್ಯ ತುಂಬುವ ಕಾರ್ಯವನ್ನು ಆಪ್ತ ಸಮಾಲೋಚಕರು ಮಾಡುವರು. ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ಜನತೆಯು ಇದರ ಸೌಲಭ್ಯ ಪಡೆಯಬೇಕು ಎಂದು ಅವರು ವಿನಂತಿಸಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಯೂ ಆದ ಡಾ.ಇಂದ್ರಾಣಿ ಅವರು ಜಿಲ್ಲೆಯಲ್ಲಿ ಹೆಚ್ಐವಿ ನಿಯಂತ್ರಣ ಚಟುವಟಿಕೆಗಳಿಗೆ ವಾಹನವನ್ನು ಬಳಸುವ ಕುರಿತು ಮಾಹಿತಿ ನೀಡಿದರು.
ಈ ವೇಳೆ ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ಅಧ್ಯಕ್ಷ ಮುಂಡರಗಿ ನಾಗರಾಜ, ಪಾಲಿಕೆಯ ಉಪಮೇಯರ್ ಡಿ.ಕುಸುಂ, ಆರೋಗ್ಯ ಶಿಕ್ಷಣ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಪದ್ಮ ರೋಜ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಸ್ಥಳೀಯ ಮುಖಂಡರಾದ ವಿವೇಕ್, ಫಯಾಜ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ,. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರ ಕುಮಾರ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕರಾದ ಗಿರೀಶ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!