ದಾವಣಗೆರೆ : ಫೆ.9 ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸಲಾಗುತ್ತಿದ್ದು ಜೀತ ಪದ್ದತಿ ಕಂಡುಬಂದಲ್ಲಿ ಕಾನೂನು ಕ್ರಮ ಅನಿವಾರ್ಯ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.
ಭಾನುವಾರ (ಫೆ.9) ರಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಢಳಿತ ಭವನದಲ್ಲಿ ಆಯೋಜಿಸಲಾಗಿದ್ದ ಬಾಲ್ಯವಸ್ಥೆಯಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿ ನಿರ್ಮೂಲನೆ ಜಾಗೃತಿ ರಥಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಅನಿಷ್ಟ ಪದ್ದತಿ ನಿರ್ಮೂಲನೆ ಆಗಬೇಕೆಂದರೆ ಅದಕ್ಕೆ ಶಿಕ್ಷಣವೊಂದೇ ಮಾರ್ಗವಾಗಿದೆ. ಇದಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು.
ಹಿಂದಿನ ಕಾಲದಿಂದಲೂ ಜೀತ ಪದ್ದತಿ ರೂಢಿಯಲ್ಲಿದೆ, ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಚಿಕ್ಕ ಚಿಕ್ಕ ಮಕ್ಕಳನ್ನು ತುಂಬಾ ಅಪಾಯಕಾರಿ ಕೆಲಸಗಳಿಗೆ ಕಳುಹಿಸಿತ್ತಾರೆ, ಇದನ್ನು ತಪ್ಪಿಸಬೇಕು. ಇಂತಹ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು ನಿರ್ಮೂಲನೆ ಮಾಡಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಅಂಥವರಿಗೆ ಪುನರ್ವಸತಿ ಕಲ್ಪಿಸಬೇಕು. ಬಾಲವ್ಯವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸುವುದು ಅತ್ಯವಶ್ಯವಿದೆ.
ಸರ್ಕಾರ ಜನ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ, ಇವುಗಳ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಹೇಳುವುದು ನಮ್ಮ ಕರ್ತವ್ಯ ಎಂದ ಅವರು ಬಾಲವ್ಯವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು.
ಸಹಾಯಕ ಕಾರ್ಮಿಕ ಆಯುಕ್ತ ಅವಿನಾಶ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್, ಕಾರ್ಮಿಕ ನಿರೀಕ್ಷಕ ರಾಜಪ್ಪ, ನಾಗೇಶ್ ಹಾಗೂ ಯೋಜನಾ ನಿರ್ದೇಶಕರಾದ ಪ್ರಸನ್ನಕುಮಾರ್ ಹಾಗೂ ವಿವಿಧ ಶಾಲೆಯ ಮಕ್ಕಳು ಭಾಗವಹಿಸಿದ್ದರು.