ಬಳ್ಳಾರಿ,ಮಾ.25:
ದಿನನಿತ್ಯ ಜೀವನದಲ್ಲಿ ಯಾವುದೇ ವಸ್ತು ಕೊಂಡುಕೊಳ್ಳುವವರು ಗ್ರಾಹಕರಾಗುತ್ತಾರೆ. ಮಾರಾಟಗಾರರ ಜೊತೆ ವ್ಯವಹರಿಸುವ ಪ್ರತಿಯೊಬ್ಬ ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಮಾಹಿತಿ ಹೊಂದಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ “ಸುಸ್ಥಿರ ಜೀವನಶೈಲಿಗಳಿಗೆ ಕೇವಲ ಪರಿವರ್ತನೆ” ಎಂಬ ಘೋಷವಾಕ್ಯದಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಗ್ರಾಹಕರು ತಾವು ಖರೀದಿಸುವ ವಸ್ತುಗಳ ಗುಣಮಟ್ಟ, ಪ್ರಮಾಣದ ಬಗ್ಗೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಹಕರು ಮಾರಾಟಗಾರರಿಂದ ಮೋಸ, ವಂಚನೆ ಅಥವಾ ಸಮಸ್ಯೆ ಉಂಟಾದಲ್ಲಿ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, ಗ್ರಾಹಕರು ಪ್ರತಿಯೊಂದು ವಸ್ತುವನ್ನು ಖರೀದಿ ಮಾಡುವಾಗ ಎಚ್ಚರ ವಹಿಸಿಬೇಕು. ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯು ವರ್ತಕರ ಹಾಗೂ ಗ್ರಾಹಕರ ಮಧ್ಯೆ ವಂಚನೆಯಾಗದAತೆ ಕಾರ್ಯ ನಿರ್ವಹಿಸಲು ಅಭಿವೃದ್ಧಿ ಪಡಿಸುತ್ತಿದ್ದು, ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ತಂತ್ರಜ್ಞಾನ ಅಭಿವೃದ್ಧಿಯಾದಂತೆ, ಮಾನವ ರಹಿತ ಯಂತ್ರಗಳೂ ಕಾರ್ಯ ನಿರ್ವಹಿಸಬಹುದಾದಂತಹ ವಾತಾವರಣವು ಸೃಷ್ಟಿಯಾಗಲಿದೆ. ಇವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲ್ಲದಿದ್ದಲ್ಲಿ ಮಾರಕವಾಗಬಹುದು ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಹಕರು ತಾವು ಕೊಂಡುಕೊಳ್ಳುವ ವಸ್ತುಗಳಲ್ಲಿ ಯಾವುದೇ ರೀತಿಯ ಮೋಸವಾದಾಗ ಮತ್ತು ತಮಗಾದ ಅನ್ಯಾಯದ ವಿರುದ್ಧ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಂಡು, ತಮಗಿರುವ ಗ್ರಾಹಕರ ಹಕ್ಕುಗಳ ಪರವಾಗಿ ಧ್ವನಿಯೆತ್ತಿ ಕಾನೂನಾತ್ಮಕವಾಗಿ ನ್ಯಾಯ ಪಡೆದುಕೊಳ್ಳಬಹುದಾಗಿದೆ ಎಂದರು.
ಅಭಿವೃದ್ಧಿ ಹೊಂದಿದ ತಂತ್ರಜ್ಞಾನದಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿ ಉಂಟಾದಾಗ ಇರುವ ಗ್ರಾಹಕರ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ, ಸಾರ್ವಜನಿಕರಿಗೆ, ಗ್ರಾಹಕರಿಗೆ ಮಾಹಿತಿ ಒದಗಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ, ವರ್ತಕರಿಗೆ ತಿಳಿಸಿದರು.
ಜಿಲ್ಲಾ ಹಿರಿಯ ವಕೀಲರಾದ ಎನ್.ಪ್ರಕಾಶ ಅವರು “ಸುಸ್ಥಿರ ಜೀವನಶೈಲಿಗಳಿಗೆ ಕೇವಲ ಪರಿವರ್ತನೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಸುರಕ್ಷಿತ ಹಕ್ಕು, ಮಾಹಿತಿ ಹಕ್ಕು, ಆಯ್ಕೆಯ ಹಕ್ಕು, ಕೊಂಡುಕೊಳ್ಳುವ ಹಕ್ಕು, ಗ್ರಾಹಕರ ಶಿಕ್ಷಣದ ಹಕ್ಕುಗಳ ಕುರಿತು ಮಾಹಿತಿ ತಿಳಿದುಕೊಳ್ಳುವುದು ಅಗತ್ಯವಾಗಿದೆ. ಗ್ರಾಹಕರ ಕುಂದು ಕೊರತೆಯ ಸಮಸ್ಯೆಗಳನ್ನು ನಿಖರವಾದ ಮಾಹಿತಿಯೊಂದಿಗೆ ಧಾವೆ ಹೂಡುವುದರ ಮೂಲಕ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕೇಂದ್ರದಲ್ಲಿ ಕಾನೂನಾತ್ಮಕವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಹಿರಿಯ ವಕೀಲರಾದ ಅಂಕಲಯ್ಯ ಅವರು ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಜಗತ್ತು ತಂತ್ರಜ್ಞಾನದ ಅಭಿವೃದ್ಧಿಯಿಂದ ಕೃತಕ ಬುದ್ಧಿಮತ್ತೆಯು ಅವಲಂಬನೆಗೊಳ್ಳುತ್ತಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಉಪಯೋಗಿಸುವುದರಿಂದ ನಿಖರ ತೂಕದ ಜೊತೆಗೆ ನಿಗದಿತ ಸಮಯವನ್ನು ಉಳಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತೂಕ ಮತ್ತು ಅಳತೆ ಕುರಿತ ವಂಚನೆಯ ಜಾಗೃತಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆಯಾದ ಮಾರ್ಲಾ ಶಶಿಕಲಾ, ಕಾನೂನು ಮಾಪನಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕರಾದ ಅಮೃತಾ.ಪಿ.ಚವ್ಹಾಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಮತ್ತೀತರರು ಉಪಸ್ಥಿತರಿದ್ದರು.