ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.
ಇಂದು (ಮಾ.24) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರು ಎಚ್.ಐ.ವಿ ಸೋಂಕಿತರು ಹಾಗೂ ದಮನಿತ ಮಹಿಳೆಯರಿಗೆ ತಲಾ 3 ರಂತೆ ಒಟ್ಟು 9 ಅರ್ಹ ಫಲಾನುಭವಿಗಳಿಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಚೇತನ ಯೋಜನೆಯಡಿ ದಮನಿತ ಮಹಿಳೆಯರು ( ಲೈಂಗಿಕ ವೃತ್ತಿ ನಿರತ ಮಹಿಳೆಯರು) ಈಗಿರುವ ವೃತ್ತಿಯಿಂದ ಹೊರಬಂದು ಆರ್ಥಿಕ ಅಭಿವೃದ್ಧಿ ಹೊಂದಲು ಪ್ರೇರೆಪಿಸಲು ಜಿಲ್ಲೆಯಲ್ಲಿ 9 ಜನರಿಗೆ ತಲಾ ರೂ 30000-/- ಧನಸಹಾಯ ನೀಡಲು ಈ ಯೋಜನೆ ರೂಪಿಸಲಾಗಿದ್ದು 23 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು,
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭೌತಿಕವಾಗಿ ಜಿಲ್ಲೆಯಲ್ಲಿ 30 ಜನರಿಗೆ ತಲಾ ರೂ 30000-/- ಆರ್ಥಿಕ ಚಟುವಟಿಕೆ ನಡೆಸಿ ಅಭಿವೃದ್ಧಿ ಹೊಂದಲು ಈ ಯೋಜನೆ ಪ್ರೇರೇಪಿಸುತ್ತದೆ, ಈಗಾಗಲೇ 19 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಧನಶ್ರೀ ಯೋಜನೆಯಡಿ ಹೆಚ್. ಐ. ವಿ ಸೋಂಕಿತ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಕಾಣಲು ತಲಾ ರೂ 30000-/- ದಂತೆ 14 ಸೋಂಕಿತ ಮಹಿಳೆಯರಿಗೆ ಯೋಜನೆ ತಲುಪಿಸುವ ಭೌತಿಕ ಗುರಿ ಹೊಂದಲಾಗಿದೆ ಎಂದರು.
ಈ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ತಲುಪಿಯೂ ಅವರು ಆರ್ಥಿಕ ಅಭಿವೃದ್ಧಿ ಹೊಂದದಿದ್ದರೆ ಯೋಜನೆಗಳು ವಿಫಲವಾದಂತೆ, ಹಿಂದಿನ 3 ವರ್ಷಗಳಿಂದ ಯೋಜಯಡಿ ಪ್ರೋತ್ಸಾಹ ಧನ ಪಡೆದಿರುವವರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬುದರ ಕುರಿತು ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆರ್ ನಂದಿನಿ ಅವರು ಮಾತನಾಡಿ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹೆಚ್ಚಾಗಬೇಕು, ಸ್ಥಳೀಯವಾಗಿ ಯಾವ ವ್ಯಾಪಾರದಿಂದ ಆರ್ಥಿಕ ಸ್ಥಿರತೆ ಕಾಣಬಹುದು, ವೈಜ್ಞಾನಿಕವಾಗಿ ಹೇಗೆ ಉದ್ಯಮದಲ್ಲಿ ಯಶಸ್ಸು ಕಾಣಬಹುದು ಎಂಬುದರ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯಗಾರ ನಡೆಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.