ವ್ಯಸನ ಮುಕ್ತ ಸಮಾಜಕ್ಕೆ ಆರೋಗ್ಯಯುತ ಹವ್ಯಾಸಗಳಿರಲಿ ದೈಹಿಕ, ಮಾನಸಿಕ ಕ್ರಿಯಾಶೀಲನೆಗೆ ಒತ್ತು ನೀಡಲು ವಿದ್ಯಾರ್ಥಿಗಳಿಗೆ ಸಲಹೆ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Vijayanagara Vani
ವ್ಯಸನ ಮುಕ್ತ ಸಮಾಜಕ್ಕೆ ಆರೋಗ್ಯಯುತ ಹವ್ಯಾಸಗಳಿರಲಿ ದೈಹಿಕ, ಮಾನಸಿಕ ಕ್ರಿಯಾಶೀಲನೆಗೆ ಒತ್ತು ನೀಡಲು ವಿದ್ಯಾರ್ಥಿಗಳಿಗೆ ಸಲಹೆ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ ಆಗಸ್ಟ್. ಮಕ್ಕಳು ವ್ಯಸನ ಮುಕ್ತರಾಗಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ತಮ್ಮ ದೈಹಿಕ ಹಾಗೂ ಮಾನಸಿಕ ವಿಕಸನಕ್ಕಾಗಿ ಸದಾ ಕ್ರಿಯಾಶೀಲರಾಗಿರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಕರೆ ನೀಡಿದರು.
ಅವರು ಗುರುವಾರ ರಾಮನಗರದಲ್ಲಿನ ಗಾಂಧಿ ಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಎನ್.ಎಸ್.ಎಸ್, ಭಾರತ ಸೇವಾದಳ, ಗ್ರಾಮ ಸ್ವರಾಜ್ ಅಭಿಯಾನ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ವ್ಯಸನ ಮುಕ್ತ ಶಿಬಿರ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಲಾದ ಕ್ವಿಟ್ ಇಂಡಿಯಾ ಚಳುವಳಿ ಒಂದು ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ವ್ಯಸನಗಳಿಗೆ ಬಲಿಯಾಗದೆ ತಮ್ಮ ದೈಹಿಕವಾದ ಬೆಳವಣಿಗೆಗೆ ಬೇಕಾದ ಆಟ ಮತ್ತು ಮಾನಸಿಕ ಬೆಳವಣಿಗೆಗೆ ಬೇಕಾದ ಜ್ಞಾನಾರ್ಜನೆ ಕಡೆ ಹೆಚ್ಚು ಒತ್ತು ಕೊಡಬೇಕು. ಈಗಿನ ಮಕ್ಕಳು ಮೊಬೈಲ್ ಹೆಚ್ಚು ಬಳಸುತ್ತಿದ್ದು ಇದು ಸಹ ಒಂದು ರೀತಿಯ ವ್ಯಸನವಾಗಿದೆ.
ಇದರಿಂದ ಆರೋಗ್ಯಕ್ಕೆ ಅಪಾಯವಾಗಲಿದ್ದು ಮುಂದೊಂದು ದಿನ ಕುತ್ತಿಗೆ, ಬೆನ್ನು, ಕೈ ನೋವು ಎಂದು ಹೇಳಬಹುದು. ಕಳೆದಿಪ್ಪತ್ತು ವರ್ಷಗಳಿಂದ ಮೊಬೈಲ್ ಬಂದಿದ್ದು ಈಗಿನ ಮಕ್ಕಳಿಗೆ ಹುಟ್ಟಿನಿಂದಲೇ ಮೊಬೈಲ್ ಗೀಳು ಬೆಳೆಸಿಕೊಳ್ಳುವ ಅವಕಾಶವಿದೆ. ಇದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಜೊತೆಗೆ ಒತ್ತಡವು ಹೆಚ್ಚಲಿದೆ. ಈ ನಿಟ್ಟಿನಲ್ಲಿ ಅನಾವಶ್ಯಕ ಮೊಬೈಲ್ ಬಳಕೆ ಕಡಿಮೆ ಮಾಡಿ ತಮ್ಮ ಆರೋಗ್ಯ ಮತ್ತು ಮಾನಸಿಕ ಸದೃಢತೆಗೆ ಹೆಚ್ಚಿನ ಒತ್ತು ನೀಡಲು ತಿಳಿಸಿದರು.
ಗ್ರಂಥಾಲಯಕ್ಕೆ ಪುಸ್ತಕಗಳು; ಗಾಂಧಿ ಭವನದಲ್ಲಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಲ್ಲಾ ಆಡಳಿತಕ್ಕೆ ಮತ್ತು ನನಗೆ ನೀಡಲಾಗುವ ಪುಸ್ತಕಗಳನ್ನು ಈ ಗ್ರಂಥಾಲಯಕ್ಕೆ ಕಳುಹಿಸಲಾಗುತ್ತದೆ. ಓದುಗರು ಗಾಂಧಿ ಭವನದ ಗ್ರಂಥಾಲಯಕ್ಕೆ ಆಗಮಿಸಿ ದಿನಿತ್ಯದ ಪತ್ರಿಕೆಗಳು ಮತ್ತು ಇಲ್ಲಿ ಸಿಗುವ ಸ್ಪರ್ಧಾತ್ಮಕ ಪರೀಕ್ಷೆ, ಕಥೆ, ಕಾದಂಬರಿ ಕುರಿತ ಅತ್ಯುತ್ತಮವಾದ ಪುಸ್ತಕಗಳನ್ನು ಓದುವಂತಾಗಬೇಕೆಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಮಾತನಾಡಿ ವ್ಯಸನಗಳಿಗೆ ದಾಸರಾಗಬಾರದು, ಇತ್ತೀಚೆಗೆ ಹೆಚ್ಚುತ್ತಿರುವ ಪಾಶ್ಚಾತ್ಯ ಸಂಸ್ಕøತಿಯಿಂದ ಈ ಸಂಖ್ಯೆ ಹೆಚ್ಚುತ್ತಿದೆ. ವ್ಯಸನ ಆರಂಭದಲ್ಲಿ ಕುತೂಹಲ ಹುಟ್ಟಿಸುತ್ತದೆ, ನಂತರ ಇದರ ಪರಿಣಾಮ ಆರಂಭವಾಗುತ್ತದೆ. ತಂಬಾಕು ಜಗಿಯುವವರು ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ಬಂದಾಗ ತಪ್ಪು ಮಾಡಿದೆ ಎಂದು ಹೇಳುತ್ತಾರೆ. ದೇಶ ಸದೃಡವಾಗಲು ಆರೋಗ್ಯವಂತ ಮಾನವ ಸಂಪನ್ಮೂಲ ಇರಬೇಕೆಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲರಾದ ದಾದಾಪೀರ್ ನವಿಲೆಹಾಳ್ ಕ್ವಿಟ್ ಇಂಡಿಯಾ ಚಳುವಳಿ ಕುರಿತಂತೆ ಉಪನ್ಯಾಸ ನೀಡಿ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಪ್ರಮುಖವಾಗಿದೆ. 1857 ರ ಮೊದಲ ಸ್ವಾತಂತ್ರ್ಯ ಸಂಗ್ರಾಮದಿಂದ ಆರಂಭವಾದ ಚಳುವಳಿ ಸ್ವಾತಂತ್ರ್ಯ ಗಳಿಸಲು 90 ವರ್ಷಗಳ ಅವಧಿ ಬೇಕಾಯಿತು. ಮಹಾತ್ಮ ಗಾಂಧೀಜಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಾಗಿನಿಂದ ಅಸಹಕಾರ ಚಳುವಳಿ ಮೂಲಕ ಇದು ತೀವ್ರ ಸ್ವರೂಪ ಪಡೆದುಕೊಂಡಿತು.
ಕಾನೂನುಭಂಗ ಚಳುವಳಿ, ಉಪ್ಪಿನಸತ್ಯಾಗ್ರಹ ನಂತರ ಅಂತಿಮ ಘಟ್ಟವಾಗಿ ಮಾಡು ಇಲ್ಲವೇ ಮಡಿ, ಭಾರತ ಬಿಟ್ಟು ಚಳುವಳಿಯಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ನೀಡಲೇಬೇಕಾದ ಸ್ಥಿತಿಗೆ ತಲುಪಿದ್ದರಿಂದ ಕ್ವಿಟ್ ಇಂಡಿಯಾ ಚಳುವಳಿ ಬಹಳ ಮಹತ್ವವಾದ ಚಳುವಳಿಯಾಗಿರುತ್ತದೆ ಎಂದರು.
ಇಂದಿನ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯ ಇತಿಹಾಸದ ಬಗ್ಗೆ ತಿಳಿದುಕೊಳ್ಳುವ ಮೂಲಕ ದೇಶದ ಬಗೆಗಿನ ಗೌರವ ಭಾವನೆ ಬೆಳೆಸಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ತಮ್ಮದಾಗಿರಬೇಕೆಂದು ತಿಳಿಸಿದರು.
ಮನೋವೈದ್ಯರಾದ ಡಾ; ಮರುಳಸಿದ್ದಪ್ಪ ಮಾತನಾಡಿ ಮದ್ಯ ಮತ್ತು ಮಾದಕ ವಸ್ತುಗಳಿಂದಾಗಿ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಸಾಕಷ್ಟು ನಷ್ಟವಾಗಲಿದೆ. ಈ ವಸ್ತುಗಳ ವ್ಯಸನಿಗಳಾಗಿದ್ದಲ್ಲಿ ಇದರಿಂದ ಮುಕ್ತಿ ಹೊಂದಲು ಚಿಕಿತ್ಸೆ ಲಬ್ಯವಿದೆ. ವ್ಯಸನ ಮುಕ್ತರನ್ನಾಗಿಸಲು ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಎಸ್.ಎಸ್. ಮತ್ತು ಬಾಪೂಜಿ ಆಸ್ಪತ್ರೆಯಲ್ಲಿ ಮನೋವೈದ್ಯರಿದ್ದು ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ, ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ; ಮಂಜುನಾಥ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪ್ರದೀಪ್ಕುಮಾರ್, ಗ್ರಾಮ ಸ್ವರಾಜ್ ಅಭಿಯಾನದ ಅವರಗೆರೆ ರುದ್ರಮುನಿ, ಜಿಲ್ಲಾ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದ ಅಧ್ಯಕ್ಷರಾದ ಐಗೂರು ತಿಮ್ಮಣ್ಣ, ರೈತ ಮುಖಂಡರಾದ ತೇಜಸ್ವಿ ಪಟೇಲ್ ಹಾಗೂ ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ.ಬಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್.ಎಸ್.ಎಸ್. ಜಿಲ್ಲಾ ಕಾರ್ಯಕ್ರಮ ಸಂಯೋಜನಾಧಿಕಾರಿ ನಾಗರಾಜ್ ನಿರೂಪಿಸಿದರು.
WhatsApp Group Join Now
Telegram Group Join Now
Share This Article
error: Content is protected !!