ಮನೆ-ಮನೆಗೆ ತೆರಳಿ ಸಾರ್ವಜನಿಕರಲ್ಲಿ ಡೆಂಗ್ಯೂ ಜಾಗೃತಿ ಮೂಡಿಸಿದ ಜಿಪಂ ಸಿಇಓ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ

Vijayanagara Vani
ಮನೆ-ಮನೆಗೆ ತೆರಳಿ ಸಾರ್ವಜನಿಕರಲ್ಲಿ ಡೆಂಗ್ಯೂ ಜಾಗೃತಿ ಮೂಡಿಸಿದ ಜಿಪಂ ಸಿಇಓ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ
ಬಳ್ಳಾರಿ,ಜೂ.28
ಮನೆ ಸುತ್ತ-ಮುತ್ತಲಿನ ಪರಿಸರದಲ್ಲಿ ನಮ್ಮ ಸಣ್ಣ ನಿರ್ಲಕ್ಷ್ಯವೂ ಡೆಂಗಿ ಜ್ವರದಿಂದ ನರಳುವಂತೆ ಮಾಡಬಹುದು. ಹಾಗಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಲಾರ್ವಾ ಸೊಳ್ಳೆಗಳನ್ನು ಪತ್ತೆ ಹಚ್ಚಿ ನಾಶಗೊಳಿಸಲು ರಾಜ್ಯ ಸರ್ಕಾರ ನಿರ್ದೇಶನದಂತೆ ಈಡಿಸ್ ಸೊಳ್ಳೆ ನಿರ್ಮೂಲನ ದಿನದ ಅಂಗವಾಗಿ ನಗರದ ಇಂದಿರಾನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಅರಿವು ಮೂಡಿಸಲು ಶುಕ್ರವಾರ ಏರ್ಪಡಿಸಿದ್ದ ಡೆಂಗ್ಯೂ ನಿಯಂತ್ರಣ ಜಾಥಾದಲ್ಲಿ ಅವರು ಮಾತನಾಡಿದರು.
ಮಹಾಮಾರಿ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ತಮ್ಮ ಮನೆಯ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಮೇಶ್ಬಾಬು ಅವರು ಮಾತನಾಡಿ, ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಡೆಂಗಿ ಜ್ವರ ಹರಡಲಿದ್ದು, ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಅವು ಕಚ್ಚುತ್ತವೆ. ಜನ ಸಾಮಾನ್ಯರು 5-6 ದಿನಗಳಿಗೊಮ್ಮೆ ಶೇಖರಣೆ ಮಾಡಿಕೊಂಡ ನೀರಿನ ತೊಟ್ಟಿ, ಡ್ರಮ್, ಬ್ಯಾರೆಲ್ ಇತರೆ ನೀರಿನ ಸಂಗ್ರಹಾರಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣ ಕಡಿಮೆಯಿದ್ದು, ರೋಗ ಸಂಪೂರ್ಣ ನಿಯಂತ್ರಿಸಲು ಸಾರ್ವಜನಿಕರು ಇಲಾಖೆಯೊಡನೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಅವರು ಮಾತನಾಡಿ, ಪ್ರಸ್ತುತ ಮುಂಗಾರಿನಲ್ಲಿ ಸಾರ್ವಜನಿಕರು ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಈಡೀಸ್ ಸೊಳ್ಳೆ ಉತ್ಪತ್ತಿಯಾಗದಂತೆ ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಹರಡುವ ಡೆಂಗೀ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ. ಡೆಂಗ್ಯು ಜ್ವರದ ಲಕ್ಷಣಗಳಾದ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ, ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.
ಬಳಿಕ ಇಂದಿರಾ ನಗರದಲ್ಲಿ ಮನೆ-ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ಲಾರ್ವಾ, ಈಜೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ‘ಡೆಂಗಿ ನಿಲ್ಲಿಸಿ’ ಎನ್ನುವ ಜಾಗೃತಿ ಭಿತ್ತಿಚಿತ್ರ ಪ್ರದರ್ಶಿಸಿದರು.
ಈ ವೇಳೆ ಜಿಲ್ಲಾ ಕೀಟ ಶಾಸ್ತ್ರಜ್ಞೆ ನಂದಾ ಕಡಿ, ವೈದ್ಯಾಧಿಕಾರಿ ಡಾ.ನರಸಿಂಹ ಮೂರ್ತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಹೆಚ್.ದಾಸಪ್ಪನವರ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಯವರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article
error: Content is protected !!