78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ, ವಿವಿಧ ಸ್ಪರ್ಧೆ, ಧ್ವಜಾರೋಹಣದಲ್ಲಿ ಭಾಗವಹಿಸಲು ಕರೆ ನೀಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Vijayanagara Vani
78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ, ವಿವಿಧ ಸ್ಪರ್ಧೆ, ಧ್ವಜಾರೋಹಣದಲ್ಲಿ ಭಾಗವಹಿಸಲು ಕರೆ ನೀಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ: 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲೆಯಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಅರ್ಥಪೂರ್ಣವಾಗಿ ಆಚರಿಸಲು ಆಗಸ್ಟ್ 14 ಹಾಗೂ 15ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ತಾವು ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಆಯೋಜಿಸಲು ಉದ್ದೇಶಿಸಿರುವ ಕಾರ್ಯಕ್ರಮಗಳ ಬಗ್ಗೆ ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಲು ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮತ್ತು ಎಲ್ಲ ತಾಲ್ಲೂಕುಗಳಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಜೊತೆಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯು ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಆಗಸ್ಟ್ 14 ರಂದು ಬೆಳಿಗ್ಗೆ 6.30 ಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾಡಳಿತ ಭವನದಿಂದ ಪಿ.ಬಿ.ರಸ್ತೆ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂಜೆ 4.30 ಕ್ಕೆ ಹೈಸ್ಕೂಲ್ ಮೈದಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ತಿರಂಗಾ ಮ್ಯಾರಥಾನ್ ಆಯೋಜಿಸಲಾಗಿದೆ’ ಎಂದು ತಿಳಿಸಿದರು.
ರಾಷ್ಟ್ರಧ್ವಜದೊಂದಿಗಿನ ಸೆಲ್ಫಿ ಚಿತ್ರವನ್ನು https://harghartiranga.com ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬಹುದು. ಎಲ್ಲ ತಾಲ್ಲೂಕುಗಳಲ್ಲೂ ಸೆಲ್ಫಿ ಪಾಯಿಂಟ್ಗಳ ವ್ಯವಸ್ಥೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಿರಂಗಾ ಮ್ಯಾರಾಥಾನ್, ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ, ಸ್ವ-ಸಹಾಯ ಸಂಘಗಳ ಸದಸ್ಯರು ಭಾಗವಹಿಸುವರು ಮತ್ತು ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಸಾಂಸ್ಕøತಿಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆಯಿಂದ ನಗರದ ಗ್ಲಾಸ್ಹೌಸ್ನಲ್ಲಿ ಆಗಸ್ಟ್ 15 ರ ವರೆಗೆ ಪ್ರತಿ ದಿನ ಸಂಜೆ 5 ಗಂಟೆಗೆ ಸಂಗೀತ ಕಾರಂಜಿ ಮತ್ತು ಸೆಲ್ಫಿ ತಿರಂಗಾ ಪಾಯಿಂಟ್ ಆಯೋಜಿಸಲಾಗಿದೆ. ಕೆಎಸ್ಆರ್ಟಿಸಿ ಯಿಂದ 400ಕ್ಕೂ ಅಧಿಕ ಬಸ್ಗಳ ಮೇಲೆ ಹರ್ ಘರ್ ತಿರಂಗಾ ಅಭಿಯಾನದ ಪೆಸ್ಟರ್ ಅಂಟಿಸಲಾಗುತ್ತದೆ ಎಂದರು.
ರಾಷ್ಟ್ರಧ್ಚಜ ಸಂಹಿತೆ ಅನುಸರಿಸಲು ಮನವಿ; ಮನೆ, ಕಚೇರಿ ಹಾಗೂ ಇನ್ನಿತರ ಸ್ಥಳಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ವೇಳೆ ಯಾವುದೇ ಅವಘಡ ಸಂಭವಿಸದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಮನವಿ ಮಾಡಿದರು.
ಧ್ವಜಾರೋಹಣ ಮಾಡುವಾಗ ಎತ್ತರದಲ್ಲಿನ ವಿದ್ಯುತ್ ಕಂಬ ಹಾಗೂ ತಂತಿಗಳ ಬಗ್ಗೆ ಎಚ್ಚರ ವಹಿಸಬೇಕು. ಮಳೆಯಲ್ಲಿ ಧ್ವಜ ನೆನೆಯದಂತೆ, ಹಾಳಾಗದಂತೆ ನೋಡಿಕೊಳ್ಳಬೇಕು. ರಾಷ್ಟ್ರಧ್ವಜವು ಸೊಂಟದ ಭಾಗಕ್ಕಿಂತ ಕೆಳಗೆ ಇರಬಾರದು, ಎದೆ ಭಾಗಕ್ಕಿಂತ ಮೇಲೆಯೇ ಇರುವಂತೆ ನೋಡಿಕೊಳ್ಳಬೇಕು. ಧ್ವಜದ ಗೌರವಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತಿರಂಗಾ ಯಾತ್ರೆಯನ್ನು ಕೈಗೊಳ್ಳಲಾಗುತ್ತದೆ. ಪ್ರತಿ ಮನೆಗಳಲ್ಲಿಯು ರಾಷ್ಟ್ರಧ್ವಜಾರೋಹಣ ಮಾಡಲು ಮತ್ತು ಸೆಲ್ಫಿ ಪಾಯಿಂಟ್ಗಳನ್ನು ಅಳವಡಿಸಲಾಗುತ್ತದೆ. ಮತ್ತು ಗ್ರಂಥಾಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುವುದು. ದೇಶಭಕ್ತಿ ಚಲನಚಿತ್ರಗಳ ಪ್ರದರ್ಶನ, ಸಂವಾದ ಕಾರ್ಯಕ್ರಮ,
150 ಅಮೃತ ಸರೋವರಗಳ ದಂಡೆಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಬೈಕ್ ರ್ಯಾಲಿ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ ಎಂದರು.
ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ ಜಿಲ್ಲೆಯ ಎಲ್ಲ 24 ಪೆಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಯಲಿದೆ. ಮತ್ತು ಸಾರ್ವಜನಿಕರು ಧ್ವಜಾರೋಹಣ ವೇಳೆ ಧ್ವಜಸಂಹಿತೆಯನ್ನು ಪಾಲಿಸಬೇಕೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!