Ad image

ಉಪ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು, ಕುಂದುಕೊರತೆ ಹಾಗೂ ದೂರುಗಳ ವಿಚಾರಣೆ

Vijayanagara Vani
ಕೊಪ್ಪಳ ಅಕ್ಟೋಬರ್ 31: ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಅಹವಾಲು, ಕುಂದುಕೊರತೆ ದೂರು ವಿಚಾರಣೆ ನಡೆಸಿದ ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಗುರುವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪ್ರಕರಣಗಳ ವಿಚಾರಣೆ ನಡೆಸಿದರು.
ಒಟ್ಟು 388 ಕ್ಕೂ ಅಧಿಕ ಅರ್ಜಿಗಳು ಸ್ವೀಕಾರ: ಗುರುವಾರದಂದು ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 388 ಕ್ಕೂ ಅಧಿಕ ಅರ್ಜಿಗಳು ಸ್ವೀಕೃತಗೊಂಡವು. ಸಾರ್ವಜನಿಕ ಅಹವಾಲು ಹಾಗೂ ಕುಂದುಕೊರತೆ ದೂರು ಅರ್ಜಿ ಸಲ್ಲಿಸಲು ಜನರಿಗಾಗಿ ಪ್ರತ್ಯೇಕ ಕೌಂಟರಗಳನ್ನು ಸ್ಥಾಪಿಸಲಾಗಿತ್ತು. ಅರ್ಜಿಸಲ್ಲಿಸಲು ಬಂದ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಸಾರ್ವಜನಿಕರ ಅಹವಾಲು, ಕುಂದುಕೊರತೆ ದೂರು ಅರ್ಜಿಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಉಪ ಲೋಕಾಯುಕ್ತರು ಕಾನೂನು ರಿತ್ಯ ವಿಚಾರಣೆ ನಡೆಸಿದರು. ಬೆಳಗ್ಗೆಯಿಂದ ರಾತ್ರಿವರೆಗೆ ನಡೆದ ಈ ಸುಧೀರ್ಘ ಅವಧಿಯ ವಿಚಾರಣೆಯಲ್ಲಿ ಕೆಲವು ಪ್ರಕರಣಗಳು ಸ್ಥಳದಲ್ಲಿಯೇ ಇತ್ಯರ್ಥಗೊಂಡವು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕರ್ನಾಟಕ ಲೋಕಾಯುಕ್ತದ ವಿಚಾರಣೆ ಅಪರ ನಿಬಂಧಕರಾದ ಡಾ. ಕಸನಪ್ಪ ನಾಯ್ಕ, ರಮಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಾಗುಬ್ಬಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತಕುಮಾರ್, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ಪ್ರಭಾರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ ಇ.ಟಿ. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ವಿವಿಧ ಸ್ಥಳಗಳಿಗೆ ಭೇಟಿ: ಕಾರ್ಯಕ್ರಮಕ್ಕೂ ಮುಂಚೆ ಗುರುವಾರ ಬೆಳಿಗ್ಗೆ ಚಿಕ್ಕಸಿಂಧೋಗಿ ಹತ್ತಿರದಲ್ಲಿ ಕೊಪ್ಪಳ ನಗರಸಭೆ ವತಿಯಿಂದ ನಿರ್ಮಿಸಿರುವ ಎರಡು ಸಾವಿರ ಗುಂಪು ಮನೆಗಳಿಗೆ ಉಪಲೋಕಾಯುಕ್ತರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ನಗರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು.
ನಂತರ ಕೊಪ್ಪಳದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಎಪಿಎಂಸಿ ಗೆ ಬರುವ ತೆರಿಗೆ ಹಣದಲ್ಲಿ ರೈತ ಭವನ ನಿರ್ಮಿಸಬೇಕು. ಇದರಿಂದ ಬೆಳೆಗಳ ಮಾರಾಟಕ್ಕೆ ಹಳ್ಳಿಗಳಿಂದ ಬರುವ ರೈತರಿಗೆ ಮತ್ತು ರೈತ ಮಹಿಳೆಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಇದರ ಜೊತೆಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮತ್ತು ಶೌಚಾಲಯದ ವ್ಯವಸ್ಥೆಯನ್ನು ಸಹ ಮಾಡಿಕೊಡಬೇಕು. ಎಪಿಎಂಸಿ ಯಲ್ಲಿ ಕೆಲಸ ಮಾಡುವ ಎಲ್ಲಾ ಹಮಾಲರಿಗೆ ಕಡ್ಡಾಯವಾಗಿ ಇನ್ಸೂರೆನ್ಸ್ ಮಾಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Share This Article
error: Content is protected !!
";