ಜಿಲ್ಲಾ ಅಂತರ ಇಲಾಖೆಗಳ ಸಮನ್ವಯ ಸಭೆಯಲ್ಲಿ ವಿವಿಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಡೆಂಗ್ಯೂ, ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ; ನಿತೀಶ್

Vijayanagara Vani
ಜಿಲ್ಲಾ ಅಂತರ ಇಲಾಖೆಗಳ ಸಮನ್ವಯ ಸಭೆಯಲ್ಲಿ ವಿವಿಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಡೆಂಗ್ಯೂ, ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ; ನಿತೀಶ್

ರಾಯಚೂರು  ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜು.15ರ ಸೋಮವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಅಂತರ ಇಲಾಖೆಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜಿಲ್ಲೆಯ ತಾಲೂಕು ಪಂಚಾಯತ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ಕುರಿತು ಜಾಗೃತಿಯನ್ನು ಹೆಚ್ಚಿನ ಮಟ್ಟದಲ್ಲಿ ಮೂಡಿಸಬೇಕೆಂದು ಸಂಬ0ಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಮಾಡುವ ವಾಹನದಲ್ಲಿ ದಿನವು ಡೆಂಗ್ಯೂ ನಿಯಂತ್ರಣದ ಬಗ್ಗೆ ನೀಡಿರುವ ಆಡಿಯೋ ತುಣುಕುಗಳನ್ನು ಪ್ರಸಾರ ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ ಆರೋಗ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಗ್ರಾಮದ ನೈರ್ಮಲ್ಯತೆ ಹಾಗೂ ಗ್ರಾಮದಲ್ಲಿರಬಹುದಾದ ಸಾಂಕ್ರಾಮಿಕ ರೋಗಗಳ ಪರಿಸ್ಥಿತಿ ಹಾಗೂ ಹತೋಟಿಯ ಬಗ್ಗೆ ಚರ್ಚಿಸಬೇಕು ಎಂದರು. ಹಾಗೂ ಗ್ರಾಮ ಪಂಚಾಯತಿಗಳು ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ನಡೆಸಬೇಕು ಎಂದರು.

ಅಂಗನವಾಡಿ ಕಾರ್ಯಕರ್ತರು ವೈಯುಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಅಂಗನವಾಡಿ ಆವರಣವನ್ನು ಸೊಳ್ಳೆ ಉತ್ಪತ್ತಿ ಮುಕ್ತವಾಗಿಡುವುದೇ ಅಲ್ಲದೆ ಸ್ವಚ್ಛತೆ ಹಾಗೂ ನೈರ್ಮಲ್ಯತೆಯಿಂದ ನೋಡಿಕೊಳ್ಳಬೇಕು ಈ ಕುರಿತು ಅಗತ್ಯ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ವೇಳೆ ದೇವದುರ್ಗ ತಾಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ ಮಾತನಾಡಿ, ದೇವದುರ್ಗ ಪಟ್ಟಣ ಸೇರಿದಂತೆ ಎಲ್ಲಾ ಗ್ರಾಮಗಳಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ಶಾಲಾ ಮಕ್ಕಳಲ್ಲಿ ಶಾಲಾ ಪ್ರಾರ್ಥನಾ ವೇಳೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗ ನಿಯಂತ್ರಣದ ಕುರಿತು ಕರಪತ್ರಗಳನ್ನು ವಿದ್ಯಾರ್ಥಿಗಳ ಹತ್ತಿರ ಓದಿಸುವ ಮೂಲಕ ಪಾಲಕರಲ್ಲಿ ಜಾಗೃತಿಗೆ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತ್ತು ಹಾಸ್ಟೆಲ್‌ನಲ್ಲಿ ಪ್ರತಿ ಶುಕ್ರವಾರ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಇಡಲು ಅರಿವು ಮೂಡಿಸಲಾಗುತ್ತದೆ ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ, 2024ನೇ ಸಾಲಿನಲ್ಲಿ ಜುಲೈ 10ರವರೆಗೆ ಜಿಲ್ಲೆಯಲ್ಲಿ ಒಟ್ಟು 43 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ದೇವದುರ್ಗ ತಾಲ್ಲೂಕಿನಲ್ಲಿ- 02, ಮಾನ್ವಿ ತಾಲ್ಲೂಕಿನಲ್ಲಿ- 08, ರಾಯಚೂರು ತಾಲ್ಲೂಕಿನಲ್ಲಿ-7, ಲಿಂಗಸೂಗೂರು ತಾಲ್ಲೂಕಿನಲಿ-7, ಸಿಂಧನೂರು ತಾಲ್ಲೂಕಿನಲಿ-3 ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕರು ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಆರೋಗ್ಯ ಇಲಾಖೆಯ ವತಿಯಿಂದ ಈಗಾಗಲೇ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಲಿಂಗಸೂಗೂರು ಸಹಾಯಕ ಆಯುಕ್ತರಾದ ಅವಿನಾಶ್ ಶಿಂಧೆ, ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ, ಜಿಲ್ಲಾ ಸರ್ವಕ್ಷಣಾಧಿಕಾರಿ ಡಾ.ಗಣೇಶ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿನಿ, ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಠಾನ ಅಧಿಕಾರಿ ಡಾ.ಯಶೋಧ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರಯ್ಯ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರಜ್ವಲ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ ಇಒ, ಪಟ್ಟಣ ಪಂಚಾಯತ್ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಇದ್ದರು.

WhatsApp Group Join Now
Telegram Group Join Now
Share This Article
error: Content is protected !!