Ad image

ಬಳ್ಳಾರಿಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಕನ್ನಡ ಭಾಷೆ ಉಳಿಸಿ, ಬೆಳೆಸುವ ಕಾರ್ಯ ಎಲ್ಲರದ್ದು: ಸಚಿವ ರಹೀಂ ಖಾನ್

Vijayanagara Vani
ಬಳ್ಳಾರಿಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಕನ್ನಡ ಭಾಷೆ ಉಳಿಸಿ, ಬೆಳೆಸುವ ಕಾರ್ಯ ಎಲ್ಲರದ್ದು: ಸಚಿವ ರಹೀಂ ಖಾನ್
ಬಳ್ಳಾರಿ,ನ.01
ಪ್ರತಿಯೊಂದು ಹೆಜ್ಜೆಯಲ್ಲಿ ಕನ್ನಡದ ಅಸ್ತಿತ್ವ ಪ್ರತಿಫಲಿಸಲು ಮುಂದಿನ ದಿನಗಳಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವ ಕಾರ್ಯವಾಗಬೇಕಿದೆ. ಇದು ಕೇವಲ ಸರ್ಕಾರದ್ದಲ್ಲ, ಬದಲಾಗಿ ಎಲ್ಲಾ ಸಾರ್ವಜನಿಕರು, ಸಂಘ-ಸoಸ್ಥೆಗಳು ಭಾಗವಹಿಸುವಿಕೆಯ ಅಗತ್ಯವಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.
ಶನಿವಾರ ಜಿಲ್ಲಾಡಳಿತ ವತಿಯಿಂದ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿ, ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ರಾಜ್ಯೋತ್ಸವದ ಸಂದೇಶ ನೀಡಿ ಅವರು ಮಾತನಾಡಿದರು.
ಕೇವಲ ಇಂಗ್ಲೀಷ್ ಓದಿದರೆ ಕೆಲಸ ಸಿಗುವುದಿಲ್ಲ. ಚೀನಾ, ಜಪಾನ್ ನಂತಹ ದೇಶಗಳು ಅಭಿವೃದ್ಧಿ ಹೊಂದಿರುವುದು ತಮ್ಮ-ತಮ್ಮ ಮಾತೃ ಭಾಷೆಯಲ್ಲಿಯೇ. ಹಾಗಾಗಿ ನಮ್ಮ ಕನ್ನಡ ಭಾಷೆ, ನಮ್ಮತನ ಬೆಳೆಸೋಣ ಎಂದು ಕಿವಿಮಾತು ಹೇಳಿದರು.
ಕನ್ನಡ ನಮ್ಮ ಉಸಿರು, ಕನ್ನಡಾಂಬೆ ತಾಯಿ ಸ್ಥಾನ ತುಂಬಿದವಳು. ಕನ್ನಡ ಭಾಷೆಗೆ ತನ್ನದೇ ಆದ ಅಸ್ಮಿತೆ ಒಳಗೊಂಡಿದ್ದು, 2,500 ವರ್ಷಗಳ ಇತಿಹಾಸ ಹೊಂದಿದೆ. ವಿಶ್ವಗುರು ಬಸವಣ್ಣ ಸೇರಿದಂತೆ ಅನೇಕ ವಚನಕಾರರು, ಸಂತರು ತಮ್ಮ ವಚನಗಳನ್ನು ಕನ್ನಡದಲ್ಲಿಯೇ ರಚಿಸಿದ್ದಾರೆ. ಪರ ರಾಜ್ಯಗಳಿಗೆ ಹೋಲಿಸಿದರೆ ಕನ್ನಡ ಭಾಷೆಯು ಯಾವುದೇ ಜಾತಿ, ಧರ್ಮ, ಭೇದ-ಭಾವವಿಲ್ಲದೇ ಯಾರಿಗೂ ಅಡಚಣೆಯಾಗದೇ ಸುಲಲಿತವಾಗಿ ಬಾಳ್ವೆ ನಡೆಸಲು ಅನುವು ಮಾಡಿದೆ ಎಂದರು.
ಸ್ವಾತoತ್ರö್ಯ ಪೂರ್ವದಿಂದಲೂ ಚಾಲ್ತಿಯಲ್ಲಿದ್ದ ಕರ್ನಾಟಕ ಏಕೀಕರಣ ಚಳುವಳಿಯ ಫಲವಾಗಿ, ರಾಜ್ಯಗಳ ಮರುಸಂಘಟನೆ ಕಾಯ್ದೆಯಡಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂತು. ಬಳಿಕ ಮುಂಬೈ, ಮದ್ರಾಸ್, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಡಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಲಾಯಿತು. ಬಳಿಕ 1973ರ ನವೆಂಬರ್ 1 ರಂದು ಅಂದಿನ ಸಿಎಂ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಅಧಿಕೃತವಾಗಿ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು ಎಂದು ತಿಳಿಸಿದರು.
ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವು ಕರ್ನಾಟಕದ ಸಂಸ್ಥಾಪನಾ ದಿನವಾಗಿದೆ. 1956 ರ ನವೆಂಬರ್ 1 ರಂದು ಮೈಸೂರು ರಾಜ್ಯವನ್ನು (ಈಗಿನ ಕರ್ನಾಟಕ) ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ಒಗ್ಗೂಡಿಸಿ ರಚಿಸಲಾಯಿತು ಎಂದು ತಿಳಿಸಿದ ಸಚಿವರು, ಕರ್ನಾಟಕದ ಏಕೀಕರಣದ ಸ್ಮರಣೆ, ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನಾಡಿನ ಸಾಧಕರನ್ನು, ಹೋರಾಟಗಾರರನ್ನು ಗೌರವಿಸುವ ಕೆಲಸವಾಗಬೇಕು ಎಂದು ಹೇಳಿದರು.
ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಅನೇಕ ಮಹನೀಯರ ಕೊಡುಗೆ ಅಪಾರವಾಗಿದೆ. ಅಂದಿನ ಸಮಯದಲ್ಲಿ ಬಳ್ಳಾರಿಯನ್ನು ಕನ್ನಡ ನಾಡಿನಲ್ಲಿ ಉಳಿಸಿಕೊಳ್ಳಲು ಹೋರಾಡಿದ ಮಹನೀಯರು, ಸಾವಿರಾರು ಕನ್ನಡ ಪ್ರೇಮಿಗಳು, ಕನ್ನಡ ಪರ ಹೋರಾಟಗಾರರ ಪೈಕಿ ರಂಜಾನ್ ಸಾಬ್ ಅವರ ಸಾಧನೆ ಅನನ್ಯ ಎಂದು ಪ್ರತಿಪಾದಿಸಿದರು.
ಬಳ್ಳಾರಿ ಜಿಲ್ಲೆಯು ವೈವಿಧ್ಯತೆಯಿಂದ ಕೂಡಿದೆ. ಕನ್ನಡ, ತೆಲುಗು, ಉರ್ದು ಭಾಷೆ ಒಳಗೊಂಡಿದ್ದು, ಎಲ್ಲಾ ಸಂಸ್ಕೃತಿಗಳ ಸಮ್ಮಿಲನ ಈ ಜಿಲ್ಲೆಯು ಒಳಗೊಂಡಿದೆ ಎಂದು ಬಣ್ಣಿಸಿದರು.
ಯುವಪೀಳಿಗೆಯಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸೋಣ. ಕನ್ನಡ ಭಾಷೆಯ ಬಳಕೆ ಮತ್ತು ಮಹತ್ವದ ಬಗ್ಗೆ ಜಾಗೃತಿ ಮೂಡಿಸೋಣ. ಪ್ರತಿಯೊಬ್ಬರೂ ಕನ್ನಡದಲಿಯೇ ವ್ಯವಹರಿಸೋಣ. ಮಕ್ಕಳಿಗೆ ಕನ್ನಡ ಭಾಷೆಯಲ್ಲಿಯೇ ಶಿಕ್ಷಣ ಕೊಡಿಸೋಣ ಎಂದು ಕರೆ ನೀಡಿದರು.
*ತೆರಿಗೆ ಪಾವತಿಯಲ್ಲಿ 2ನೇ ಸ್ಥಾನ:*
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕನ್ನಡ ಭಾಷೆ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅದರಂತೆ ನಮ್ಮ ರಾಜ್ಯವು ತೆರಿಗೆ ಪಾವತಿಯಲ್ಲಿ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಪ್ರತಿವರ್ಷ ಸುಮಾರು 4 ಲಕ್ಷ ಕೋಟಿ ರೂ. ತೆರಿಗೆ ನಮ್ಮ ರಾಜ್ಯದಿಂದಲೇ ಸಂದಾಯವಾಗುತ್ತಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಅನೇಕ ಜನಪರ ಯೋಜನೆಗಳನ್ನೇ ಜಾರಿಗೆ ತಂದಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿಯೇ ವಾರ್ಷಿಕ 60 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಇವು ಸಾಮಾನ್ಯ ಜನರ ಏಳ್ಗೆಗೆ ಪೂರಕವಾಗಿವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೇ ಇರುವ ಮನೆಗಳಲ್ಲಿ ವಾಸಿಸುತ್ತಿರುವ ಜನ ಸಾಮಾನ್ಯರ ಸ್ಥಿತಿ ಮನಗಂಡು ಸಿದ್ದರಾಮಯ್ಯ ಅವರು ಎ-ಖಾತಾ, ಬಿ-ಖಾತಾ ವಿತರಣೆ ಕಾರ್ಯಕ್ರಮ ರೂಪಿಸಿದ್ದರು. ಈಗಾಗಲೇ ರಾಜ್ಯದಲ್ಲಿ ಶೇ.70 ರಷ್ಟು ಖಾತಾ ವಿತರಿಸಲಾಗಿದೆ ಎಂದರು.
*ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆ:*
70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಸಾರಿಗೆ ಇಲಾಖೆ) ವತಿಯಿಂದ ಸ್ತಿçÃ-ಶಕ್ತಿ ಸಬಲೀಕರಣ ಯೋಜನೆಯ ಫಲಾನುಭವಿಗಳ ವೇಷಧಾರಿಗಳು, ತೋಟಗಾರಿಕೆ ವತಿಯಿಂದ ಪರಿಸರ ಸಂರಕ್ಷಣೆಯ ಗಿಡಗಳು ಪ್ರದರ್ಶಿಸಿದರೆ ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ಮುಕ್ತ ನಗರ-ಸ್ವಚ್ಛ ನಗರ ವಿಷಯದೊಂದಿಗೆ ಸ್ತಬ್ಧಚಿತ್ರ ರೂಪಿಸಲಾಗಿತ್ತು.
ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗೃಹಲಕ್ಷಿö್ಮ ಯೋಜನೆಯ ಸ್ತಬ್ಧಚಿತ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗ್ಯೂ ಹಾಗೂ ಇತರೆ ರೋಗಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸೇರಿದಂತೆ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸ್ತಬ್ಧಚಿತ್ರಗಳು ಗಮನ ಸೆಳೆದವು.
ವಿವಿಧ ಕನ್ನಡ ಪರ ಸಂಘಟನೆಗಳಿoದ ಕನ್ನಡ ತಾಯಿ ಭುವನೇಶ್ವರಿ ದೇವಿ ಅವರ ಭಾವಚಿತ್ರ ಹಾಗೂ ಕರ್ನಾಟಕ ಏಕೀಕರಣದ ರೂವಾರಿ ಬಳ್ಳಾರಿಯ ಹೋರಾಟಗಾರ ಪಿಂಜಾರ ರಂಜಾನ್ ಸಾಬ್ ಅವರ ಭಾವಚಿತ್ರ ವಾಹನ ಕಾರ್ಯಕ್ರಮದ ವಿಶೇಷವಾಗಿತ್ತು.
*ಸಾಧಕರ ಸನ್ಮಾನ:*
ಕನ್ನಡ ನಾಡು-ನುಡಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಸನ್ಮಾನಿಸಿ ಗೌರವಿಸಲಾಯಿತು.
ಬರ್ರಕಥಾ- ಜಂಬಕ್ಕ ಎಂಡಿ ಕ್ಯಾಂಪ್(ಕoಪ್ಲಿ), ಬಯಲಾಟ- ಚೆನ್ನದಾಸರ ಮಾರೆಪ್ಪ(ಮೆಟ್ರಿ), ಹಗಲುವೇಷ- ಕೆ.ಶಂಕ್ರಪ್ಪ(ಶ್ರೀಧರಗಡ್ಡೆ), ಕನ್ನಡ ಸೇವೆ- ಹೀಮಂತ್ ರಾಜ್ ಸಂಗನಕಲ್ಲು, ಶಿಕ್ಷಣ ಕ್ಷೇತ್ರ- ಸಿ.ಎಂ.ಶಿಗ್ಗಾವಿ ಸಂಡೂರು ಮತ್ತು ಪುರುಷೋತ್ತಮ ಬಿ.ಬಳ್ಳಾರಿ, ವೈದ್ಯಕೀಯ ಕ್ಷೇತ್ರ- ಡಾ.ಮಧುಸೂಧನ್ ಕಾರಿಗನೂರು (ಸಿರುಗುಪ್ಪ), ಸಾಹಿತ್ಯ ಕ್ಷೇತ್ರ- ಬಂಗಿ ದೊಡ್ಡ ಮಂಜುನಾಥ (ಕಂಪ್ಲಿ), ಚಿತ್ರಕಲೆ ಕ್ಷೇತ್ರ- ಮಹ್ಮದ್ ರಫಿ ಬಳ್ಳಾರಿ, ಸಾಹಿತ್ಯ/ಸಂಘಟನೆ ಕ್ಷೇತ್ರ- ದಮ್ಮೂರು ಮಲ್ಲಿಕಾರ್ಜುನ(ಸಿರುಗುಪ್ಪ) ಪತ್ರಿಕೋದ್ಯಮ- ಕೆ.ಎನ್.ಗಂಗಾಧರ ಗೌಡ.
70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶಾಲೆ ಮತ್ತು ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕನ್ನಡ ಪ್ರೇಮಿಗಳ ನೇತೃತ್ವದಲ್ಲಿ ಹಂಪಿಯ ತಾಯಿ ಭುವನೇಶ್ವರಿ ದೇವಸ್ಥಾನದಿಂದ ಪ್ರತಿವರ್ಷದಂತೆ ಈ ವರ್ಷವೂ ತಂದ ಕನ್ನಡ ಜ್ಯೋತಿಯನ್ನು ಸಚಿವರ ಸಮ್ಮುಖದಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ಬಳಿಕ ವಿವಿಧ ಪ್ರಕಾರ ಕಲಾ ತಂಡಗಳ ವಾದ್ಯಗಳ ಕಲರವದೊಂದಿಗೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳನ್ನೊಳಗೊಂಡ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಕನ್ನಡ ಪ್ರೇಮ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳು, ಹೋರಾಟಗಾರರು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Share This Article
error: Content is protected !!
";