ಬಳ್ಳಾರಿ,ಆ.11):
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ತುರ್ತು ಪರಿಸ್ಥಿತಿಯ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೇಳಿದರು.
ಮಂಗಳವಾರ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ವೀಡಿಯೋ ಸಂವಾದ ಕಾರ್ಯಕ್ರಮಕ್ಕೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಕಚೇರಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರವು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ನೇರ ಸಂವಾದಕ್ಕಾಗಿ ಆರಂಭಿಸಿರುವ ‘ಪ್ರಜಾಸೇವೆ' ಇಲಾಖೆಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಪರಿಹಾರ ಕ್ರಮಗಳು ತಳಮಟ್ಟದ ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಲಾಗಿದೆ ಎಂದು ಪ್ರತಿಪಾದಿಸಿದರು.
*164 ತಾಲ್ಲೂಕುಗಳಲ್ಲಿ ಭೀಕರ ಅಭಾವ:*
ರಾಜ್ಯದ ಒಟ್ಟು 240 ತಾಲ್ಲೂಕುಗಳ ಪೈಕಿ 164 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ. ರೈತರು ಬೆಳೆ ನಷ್ಟದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಬೋರ್ವೆಲ್ಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಅಲ್ಲದೆ ನೆರೆ ರಾಜ್ಯಗಳಲ್ಲೂ ಬೆಳೆ ಇಲ್ಲದ ಕಾರಣ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಎಮ್.ಎಫ್ ಮೂಲಕ ತುಮಕೂರು ಸೇರಿದಂತೆ ವಿವಿಧೆಡೆ 1 ಲಕ್ಷ ಮೇವಿನ ಕಿಟ್ಗಳನ್ನು ವಿತರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.
*ವಿಬಿ ಜಿ ರಾಮ್ ಜಿ ಯೋಜನೆ ಮೂಲಕ ಉದ್ಯೋಗ:*
ಗ್ರಾಮೀಣ ಭಾಗದಿಂದ ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿ ಕಾಮಗಾರಿಗಳಿಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ 51,000 ಮಾನವ ದಿನಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಬೆಳೆ ವಿಮೆ ನೊಂದಣಿ ಸಮಯದಲ್ಲಿ ಆಸಕ್ತಿ ತೋರುವ ಇನ್ಶೂರೆನ್ಸ್ ಕಂಪನಿಗಳು, ರೈತರಿಗೆ ನಷ್ಟ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ, ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು.
*‘ಭಾರತ್ ಜೋಡೋ' ಸಂಘಗಳ ರಚನೆ:*
ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಭಾವೈಕ್ಯತೆಯನ್ನು ಮೂಡಿಸಲು ಪ್ರತಿಯೊಂದು ಪಂಚಾಯಿತಿಯಲ್ಲಿ ‘ಭಾರತ್ ಜೋಡೋ' ಸಂಘಗಳನ್ನು ರಚಿಸಿ, ಪ್ರತಿ ಸಂಘಕ್ಕೆ ವಷÀðಕ್ಕೆ ರೂ.10 ಲಕ್ಷ ಅನುದಾನ ನೀಡುವ ವಿನೂತನ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಬರಗಾಲದ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ, ಪ್ರತಿಯೊಬ್ಬ ಜಿಲ್ಲಾಧಿಕಾರಿ, ಸಿಇಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.
----------
