ಬಳ್ಳಾರಿ,ಜೂ.20
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಿ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ವಿಶೇಷ ಹೆಜ್ಜೆ ಇಟ್ಟಿದ್ದಾರೆ.
ಹಾಗಾಗಿ ಅವರು ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಕ್ಷೇತ್ರದ ಬಂಡಿಹಟ್ಟಿ ಮತ್ತು ಎತ್ತಿನ ಬೂದಿಹಾಳ್ ಗ್ರಾಮದ ಸರ್ಕಾರಿ ಶಾಲೆಗಳ ಸಂಪೂರ್ಣ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದು, ಶುಕ್ರವಾರ ಈ ಶಾಲೆಗಳನ್ನು ದತ್ತು ಪಡೆದುಕೊಂಡರು.
ಆಯ್ಕೆಯಾದ ಎರಡು ಶಾಲೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ. ಗಳಂತೆ ಒಟ್ಟು 20 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆಯನ್ನು ನೀಗಿಸುವುದು, ಡಿಜಿಟಲ್ ಕಲಿಕೆಗೆ ಉತ್ತೇಜನ ಮತ್ತು ಆಕರ್ಷಕ ಶಾಲಾ ವಾತಾವರಣ ನಿರ್ಮಾಣ ಮಾಡುವುದಾಗಿದೆ.
ಈ ಅನುದಾನದಡಿ ಶಾಲಾ ಕಟ್ಟಡಗಳ ದುರಸ್ತಿ, ಸುಣ್ಣ-ಬಣ್ಣ, ಆಧುನಿಕ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ರೂಮ್ ಹಾಗೂ ಪೀಠೋಪಕರಣಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ.
*ಶ್ಲಾಘನೆ:*
ಶಾಸಕರ ಈ ಜನಪರ ನಿರ್ಧಾರಕ್ಕೆ ಕ್ಷೇತ್ರದ ಸಾರ್ವಜನಿಕರು ಮತ್ತು ಪೋಷಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಖಾಸಗಿ ಶಾಲೆಗಳ ವ್ಯಾಮೋಹದ ನಡುವೆ, ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಈ ಮಟ್ಟದ ಅನುದಾನ ನೀಡಿರುವುದು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದು ಸ್ಥಳೀಯ ಮುಖಂಡರು ಹರ್ಷ ವ್ಯಕ್ತಪಡಿಸಿದರು.

