ಶಿವಮೊಗ್ಗ : ಜೂನ್ 03 : ಪ್ರತಿಯೊಂದು ಮಗುವು ಕುಟುಂಬದ ಭಾಗವಾಗಿದ್ದು, ಕುಟುಂಬದ ಪ್ರೀತಿ, ಪಾಲನೆ, ಗೌರವ, ಕುಟುಂಬದ ರಕ್ಷಣೆ ಹಾಗೂ ಭದ್ರತೆಗೆ ಅರ್ಹವಾಗಿರುತ್ತದೆ. ಮಗುವಿನ ಸುರಕ್ಷತೆ ಭಾವನಾತ್ಮಕ ಒಳಿತು ಹಾಗೂ ಕಲಿಕೆಗೆ ಮಾರಕವಾಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಕಳಂಕ ಮತ್ತು ಆರ್ಥಿಕ ಸಮಸ್ಯೆಯಾಗಿದ್ದು, ಸಮಾಜದ ಸಂಘಟಿತ ಪ್ರಯತ್ನ ಹಾಗೂ ಹೋರಾಟದಿಂದ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾದ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬಾಲಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಮಕ್ಕಳಿಂದ ದುಡಿಸಿಕೊಳೂವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದವರು ನುಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ದೇಶದ ಮುಂದಿರುವ ಕಠಿಣ ಸವಾಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಈ ಪದ್ಧತಿಯನ್ನು ಎದುರಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಸಂಬಂಧಿತ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ತಮ್ಮ ಜಬಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.
14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಕೆಲಸಗಳು, ಗಣಿಗಾರಿಕೆ, ಪಟಾಕಿ ಕಾರ್ಖಾನೆ, ರಾಸಾಯನಿಕ ಕಾರ್ಖಾನೆ ಮುಂತಾದ ಅಪಾಯಕಾರಿ ಸ್ಥಳಗಳಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20,000 ರೂ.ನಿಂದ 50,000 ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರ ಪಡಿಸುವಂತೆ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಜನಜಾಗೃತಿಗಾಗಿ ಬಾಲಕಾರ್ಮಿಕ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸುವುದು, ತರಬೇತಿ ಕಾರ್ಯಕ್ರಮಗಳ ಆಯೋಜನೆ, ಜಾಥಾ ಹಾಗೂ ಬೀದಿನಾಟಕಗಳ ಆಯೋಜನೆ, ಗೋಡೆ ಬರಹಗಳನ್ನು ಹಾಗೂ ಸ್ಟಿಕರ್ಗಳು ಹಾಗೂ ಕರಪತ್ರಗಳನ್ನು ಹಂಚುವುದು ಮತ್ತು ಬಾಲ ಕಾರ್ಮಿಕ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ವಿಶೇಷ ಗಮನಹರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್ ಅವರು ಮಾತನಾಡಿ, ಇಟ್ಟಿಗೆ ಗುಮ್ಮಿ, ಗ್ಯಾರೇಜ್, ವೆಲ್ಡಿಂಗ್ವರ್ಕ್ಸ್ ಮುಂತಾದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಬಾಲಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು, ಸ್ಥಳೀಯ ಅಧಿಕಾರಿಗಳು ಅನಿರೀಕ್ಷಿತ ದಾಳಿಗಳನ್ನು ನಡೆಸಿ, ಯಾವುದೇ ವಿನಾಯಿತಿ ನೀಡದೇ ಮೊಕದ್ದಮೆಗಳನ್ನು ದಾಖಲಿಸುವಂತೆ ಸೂಚಿಸಿದ ಅವರು, ದಾಳಿಗಳಲ್ಲಿ ಪತ್ತೆಯಾದ ಬಾಲಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿ (Child welfare committe) ಯ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ, ಮುಖ್ಯವಾಹಿನಿ ಶಾಲೆಗಳಲ್ಲಿ ಮಕ್ಕಳ ಅರ್ಹತೆಗನುಗುಣವಾಗಿ ದಾಖಲು ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೂನ್ ಮಾಸಾಂತ್ಯದೊಳಗೆ ಇನ್ನೂ ಶಾಲೆಗೆ ದಾಖಲಾಗದ ಮಕ್ಕಳ ವಿವರಗಳನ್ನು ಶಿಕ್ಷಣ ಇಲಾಖೆಯಿಂದ ಪಡೆದು ಕಾರ್ಮಿಕ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಜಿ.ಪಂ.ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ಖಾನ್ ಸೇರಿದಂತೆ ವಿವಿಧ ಇಲಾಖೆಯಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಉಪಸ್ಥಿತರಿದ್ದರು

