ಬಳ್ಳಾರಿ,ಆ.07
ಸಿರುಗುಪ್ಪ ತಾಲ್ಲೂಕಿನಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಶುಕ್ರವಾರ ಬಳ್ಳಾರಿ ಜಿಲ್ಲಾ ಅತಿವೃಷ್ಠಿ ಮತ್ತು ಬರ ಪರಿಸ್ಥಿತಿ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು, ಸಮೀಪದ ಸಿದ್ದರಾಂಪುರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ರೈತರ ಜಮೀನುಗಳಲ್ಲಿ ಬೆಳೆದ ಬೆಳೆಯ ಸ್ಥಿತಿಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುತ್ತಿದ್ದು, ರೈತರಿಂದ ಬೆಳೆ ನಷ್ಟದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ಸಿದ್ದರಾಂಪುರ ಗ್ರಾಮದ ರೈತ ಮಹಿಳೆ ರಾಜೇಶ್ವರಮ್ಮ ಇವರ 3 ಎಕರೆಯಲ್ಲಿ ಬೆಳೆದ ಸಜ್ಜೆ ಬೆಳೆಯನ್ನು ಪರಿಶೀಲಿಸಿ ನಡೆಸಿ, ಸಜ್ಜೆ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಒಣಗಿರುವುದನ್ನು ಕಂಡು ಸ್ಥಳದಲ್ಲಿದ್ದ ಕೃಷಿ ಅಧಿಕಾರಿಗಳಿಗೆ ರೈತರಿಗೆ ಬೆಳೆ ವಿಮೆ ಪಡೆಯಲು ಕ್ರಮ ವಹಿಸಲು ಸೂಚಿಸಿದರು.
ಸಿರುಗುಪ್ಪ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಮುಂಗಾರು ಹಂಗಾಮು ಸಂಪೂರ್ಣ ವಿಫಲಗೊಳ್ಳುವ ಭೀತಿ ಎದುರಾಗಿದೆ. ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಶೇ.25 ಕ್ಕಿಂತ ಕಡಿಮೆ ಬಿತ್ತನೆಯಾಗಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಬಿತ್ತನೆ ನಿಯಮದಡಿ ರೈತರಿಗೆ ರಕ್ಷಣೆ ಸಿಗಲಿದೆ ಎಂದು ತಿಳಿಸಿದರು.
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹವಾಗುವ ನಿರೀಕ್ಷೆ ಇದ್ದು, ಆದಷ್ಟು ಶೀಘ್ರವಾಗಿ ಕಾಲುವೆಗಳಿಗೆ ಬೆಳೆಗಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ ಅವರು ಮಾತನಾಡಿ, ಸಿರುಗುಪ್ಪ ತಾಲ್ಲೂಕಿನ ಹಚ್ಚೊಳ್ಳಿ ಹೋಬಳಿ ಹೊರತಾಗಿ ಉಳಿದೆಲ್ಲ ಹೋಬಳಿಗಳಲ್ಲಿ ಮಳೆಯ ಕೊರತೆಯಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಿ ರೈತರಿಗೆ ಅನುಕೂಲ ಕಲ್ಪಿಸುವ ಕ್ರಮ ವಹಿಸಲಾಗುವುದು ಎಂದರು.
ವಿವಿಧ ಸಂಘಟನೆಗಳ ರೈತರು ಹಾಗೂ ಗ್ರಾಮಸ್ಥರು ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ, ತೋಟಗಾರಿಕಾ ಜಂಟಿ ನಿರ್ದೇಶಕ ಶಶಿಕಾಂತ್, ತಹಶೀಲ್ದಾರ್ ಗೌಸಿಯಾ ಬೇಗಂ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು, ಸಾರ್ವಜನಿಕರು ಹಾಜರಿದ್ದರು.
=====
