ಕೊಪ್ಪಳ ಜುಲೈ 25 2026-27 ನೇ ಸಾಲಿನ ಮುಂಗಾರು ಹಾಗೂ ತಡ ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ಹವಾಮಾನ ವೈಪರೀತ್ಯ ಹಾಗೂ ಮಳೆಯ ಕೊರತೆಯಿಂದಾಗಿ ರೈತರು ಸಾಂಪ್ರದಾಯಿಕ ಬೆಳೆಗಳಿಗೆ ಪರ್ಯಾಯವಾಗಿ ಕಡಿಮೆ ನೀರು ಅಗತ್ಯವಿರುವ ಬೆಳೆಗಳನ್ನು ಬೆಳೆಯಲು ಮುಂದಾಗುವುದು ಅತ್ಯಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ಜಮೀನುಗಳಲ್ಲಿ ಬಿತ್ತನೆ ಮಾಡಿರುವ ಕೆಲವು ಬೆಳೆಗಳು ತೇವಾಂಶದ ಕೊರತೆಯಿಂದ ಬಾಡಲಾರಂಭಿಸಿವೆ. ಆದ್ದರಿಂದ ರೈತರು ಕಡಿಮೆ ಮಳೆಯಲ್ಲಿಯೂ ಬೆಳೆಯಬಹುದಾದ ಹಾಗೂ ಬರ ಪರಿಸ್ಥಿತಿಯನ್ನು ತಡೆದುಕೊಳ್ಳುವ ತೊಗರಿ, ಸಜ್ಜೆ, ಸೂರ್ಯಕಾಂತಿ ಮತ್ತು ಸಿರಿಧಾನ್ಯಗಳಂತಹ ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು.
ಈ ಬೆಳೆಗಳು ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ನೀಡುವ ಸಾಮರ್ಥ್ಯ ಹೊಂದಿದ್ದು, ಬೆಳೆ ನಷ್ಟವನ್ನು ಕಡಿಮೆ ಮಾಡಲು ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ. ರೈತರು ತಮ್ಮ ಜಮೀನಿನ ಮಣ್ಣಿನ ಗುಣಲಕ್ಷಣ, ಲಭ್ಯವಿರುವ ತೇವಾಂಶ ಮತ್ತು ಸ್ಥಳೀಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಬೆಳೆಗಳನ್ನು ಆಯ್ಕೆ ಮಾಡಬೇಕು. ಇದರಿಂದ ಮಣ್ಣಿನ ಪೋಷಕಾಂಶಗಳ ಸಮತೋಲನ ಕಾಪಾಡಿಕೊಂಡು ಮುಂದಿನ ಬೆಳೆಗಳಿಗೂ ಅನುಕೂಲವಾಗುತ್ತದೆ. ಅಲ್ಲದೆ, ಸ್ಥಳೀಯ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಉತ್ತಮ ಬೇಡಿಕೆ ಮತ್ತು ಬೆಲೆ ದೊರೆಯುವ ಸಾಧ್ಯತೆಯಿದೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಸಜ್ಜೆ, ಮೆಕ್ಕೆಜೋಳ, ತೊಗರಿ, ಅಲಸಂದಿ, ಹತ್ತಿ ಸೇರಿದಂತೆ ಅಧಿಸೂಚಿತ ಬೆಳೆಗಳಿಗೆ ರೈತರು ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಮುಂದಾಗಬೇಕು.
ಹೆಚ್ಚಿನ ಮಾಹಿತಿ, ಪರ್ಯಾಯ ಬೆಳೆಗಳ ಆಯ್ಕೆ ಹಾಗೂ ಅಧಿಸೂಚಿತ ಬೆಳೆಗಳ ವಿವರಗಳಿಗಾಗಿ ರೈತರು ಸಮೀಪದ ಬ್ಯಾಂಕ್ ಶಾಖೆ, ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
