ಕೊಪ್ಪಳ ಜೂನ್ 06ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಮತ್ತು ಕಾನೂನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಕ್ರಿಯಾ ಯೋಜನೆಯ ಅನುಷ್ಠಾನ ಪ್ರಗತಿ ಪರಿಶೀಲನೆ ಕುರಿತಂತೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೋಟೆಲ್ಗಳು, ಗ್ಯಾರೇಜ್ಗಳು, ಇಟ್ಟಿಗೆ ಭಟ್ಟಿಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಿರಂತರ ಕಾರ್ಯಾಚರಣೆ ನಡೆಸಬೇಕು. ದಿಢೀರ್ ದಾಳಿ ನಡೆಸಿ ಪರಿಶೀಲಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಪ್ರತಿ ತಿಂಗಳಿಗೆ ಕನಿಷ್ಠ 4 ದಾಳಿಗಳನ್ನು ನಡೆಸಬೇಕು. ದಾಳಿಯ ಸಂದರ್ಭದಲ್ಲಿ ರಕ್ಷಿಸಲ್ಪಟ್ಟ ಬಾಲಕಾರ್ಮಿಕರಿಗೆ ಕೇವಲ ಮುಕ್ತಿ ಕೊಡಿಸಿದರೆ ಸಾಲದು, ಅವರಿಗೆ ಸೂಕ್ತ ಉಚಿತ ಶಿಕ್ಷಣ, ವಸತಿ ಹಾಗೂ ಸರ್ಕಾರಿ ಸೌಲಭ್ಯಗಳ ಮೂಲಕ ಗೌರವಾನ್ವಿತ ಪುನರ್ವಸತಿ ಕಲ್ಪಿಸುವುದು ಅತೀ ಮುಖ್ಯ. ಸಾರ್ವಜನಿಕರಲ್ಲಿ ಮತ್ತು ಮಾಲೀಕರಲ್ಲಿ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಕರಪತ್ರಗಳನ್ನು ಹಂಚುವುದು, ಡಂಗೂರ ಸಾರುವುದರ ಮೂಲಕ ವ್ಯಾಪಕ ಜಾಗೃತಿ ಮೂಡಿಸಬೇಕು. ಪ್ರತಿ ಮಗುವಿಗೂ ಅದರ ಬಾಲ್ಯ ಮತ್ತು ಅಗತ್ಯ ಶಿಕ್ಷಣವನ್ನು ಪಡೆಯುವ ಹಕ್ಕಿದೆ. ಆದ್ದರಿಂದ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜೂನ್ 12 ರಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು, ಅಂದು ಜಿಲ್ಲಾಡಳಿತದಿಂದ ಬಾಲ ಕಾರ್ಮಿಕ ಪದ್ದತಿ ವಿರೋಧಿ ಪ್ರತಿಜ್ಞೆಯನ್ನು ಸ್ವೀಕರಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲ ಕಚೇರಿಗಳಲ್ಲಿಯೂ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು. ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಬೇಕು. ಜಿಲ್ಲೆಯಲ್ಲಿ ಬಾಲಕಾರ್ಮಿಕರು ಪತ್ತೆಯಾದ ಕಾರ್ಖಾನೆ, ಅಂಗಡಿ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟವಾದ ಬಗ್ಗೆ ಪತ್ರಿಕೆಗಳಲ್ಲಿ ಮಾಹಿತಿ ಪ್ರಚುರಪಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಮಾತನಾಡಿ, ಸರ್ಕಾರದ ಎಲ್ಲ ಇಲಾಖೆಗಳಲ್ಲಿರುವ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಎಲ್ಲ ಇಲಾಖೆಗಳ ಯೋಜನೆಗಳನ್ನು ಪರಿಷ್ಕರಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ಯೋಜನೆಗಳ ಬಗ್ಗೆ ಕೈಪಿಡಿಯನ್ನು ಮುದ್ರಿಸಿ ಜಿಲ್ಲೆಯ ಎಲ್ಲ ಗ್ರಂಥಾಲಯ, ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರಿಗೆ ಲಭ್ಯವಾಗಿಸಬೇಕು. ಬಾಲ ಕಾರ್ಮಿಕ ಪದ್ಧತಿ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಮಾರಕವಾಗಿದ್ದು, ದಾಳಿ ನಡೆಸಿ ಮಗುವನ್ನು ರಕ್ಷಿಸಬೇಕು. ಮಗುವಿನ ಪೋಷಕರಿಗೂ ಸೂಕ್ತ ತಿಳುವಳಿಕೆ ನೀಡಿ, ಮಗುವಿಗೆ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಬಾಲ ಕಾರ್ಮಿಕ ಯೋಜನೆ ಸೊಸೈಟಿಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರು, ಕೊಪ್ಪಳ ಸಿಡಿಪಿಒ ಸಿಂಧು ಅಂಗಡಿ, ಶಿಕ್ಷಣ ಇಲಾಖೆಯ ಬಸವರಾಜ ಎ., ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
