ರಾಷ್ಟ್ರೀಯ ಲೋಕ ಅದಾಲತ್ ರಾಜೀ ಸಂಧಾನದಿಂದ ಶೀಘ್ರ ನ್ಯಾಯ, ಸಮಯ ಉಳಿತಾಯ ಹಾಗೂ ಸಾಮರಸ್ಯ : ರಾಜೇಶ್ವರಿ.ಎನ್ ಹೆಗಡೆ

Vijayanagara Vani
ರಾಷ್ಟ್ರೀಯ ಲೋಕ ಅದಾಲತ್ ರಾಜೀ ಸಂಧಾನದಿಂದ ಶೀಘ್ರ ನ್ಯಾಯ, ಸಮಯ ಉಳಿತಾಯ ಹಾಗೂ ಸಾಮರಸ್ಯ : ರಾಜೇಶ್ವರಿ.ಎನ್ ಹೆಗಡೆ
ದಾವಣಗೆರೆ ಜುಲೈ.9  ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ಇಲ್ಲಿ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅತ್ಯುತ್ತಮ ಅವಕಾಶ ಇದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು.
ಅವರು ಜುಲೈ 9 ರಂದು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತತಿದೆ. ರಾಜಿಯಾಗಬಲ್ಲ ಎಲ್ಲಾ ಪ್ರಕರಣಗಳನ್ನು ಇಲ್ಲಿ ಇತ್ಯರ್ಥ ಮಾಡಿಕೊಳ್ಳುವುದರಿಂದ ಎರಡೂ ಕಡೆ ಕಕ್ಷೀದಾರರಿಗೆ ಸಮಯ, ಹಣ ಉಳಿತಾಯವಾಗಿ ಶೀಘ್ರ ನ್ಯಾಯ ಸಿಗಲಿದೆ ಎಂದರು.
ವಾಜ್ಯ ಪೂರ್ವ ಪ್ರಕರಣಗಳು: ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೈಂಟನೆನ್ಸ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಬಗೆಹರಿಸಲಾಗುವುದು. ಈ ದಿನಾಂಕಗಳ ಹೊರತಾಗಿಯೂ ಸತತವಾಗಿ ನಡೆಯುವ ಲೋಕ ಅದಾಲತ್ ಮುಖಾಂತರ ಕೂಡ ಕಕ್ಷಿದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ವಕೀಲರ ಸಹಕಾರದೊಂದಿಗೆ ಕಲಾಪ ನಡೆಸುವರು. ಇದೇ ರೀತಿ ತಾಲ್ಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಳ್ಳಲು ಈ ಲೋಕ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಐದು ಸಾವಿರದಿಂದ ಆರು ಸಾವಿರ ಪ್ರಕರಣ ಇತ್ಯರ್ಥದ ಗುರಿ : ಜುಲೈ.13 ರಂದು ನಡೆಯುವ ಲೋಕ ಅದಾಲತ್ನಲ್ಲಿ ರಾಜೀಯಾಗಬಲ್ಲ ಸುಮಾರು 5 ರಿಂದ 6 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. 2019 ರ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 40,713 ಪ್ರಕರಣಗಳು ಬಾಕಿ ಇವೆ. ಈ ಪೈಕಿ 8871 ರಾಜೀ ಆಗಬಲ್ಲ ಪ್ರಕರಣಗಳನ್ನು ಗುರುತಿಸಿ ರೆಫರ್ ಮಾಡಲಾಗಿದೆ.
ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಕಡಿಮೆ ಇದ್ದು, ಹೆಚ್ಚಿನ ಪ್ರಚಾರ ಮತ್ತು ಮಾಹಿತಿ ನೀಡುವ ಮೂಲಕ ಪರಿಣಾಮಕಾರಿಯಾಗಿ ಅರಿವು ಮೂಡಿಸಲಾಗುತ್ತಿದೆ. ಸಣ್ಣ ಪುಟ್ಟ ಪ್ರಕರಣಗಳ ಕುರಿತು ರಾಜೀ ಸಂಧಾನದ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳಬಹುದು. ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂಬುದನ್ನು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದರೆ ನ್ಯಾಯಾಲಯಕ್ಕೆ ಬರುವ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತದೆ ಎಂದರು.
ಲೋಕ್-ಆದಾಲತ್ ವಿಶೇಷತೆಗಳು: ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ರಾಜೀಯಾಗಬಲ್ಲ ಪ್ರಕರಣಗಳ ಬಗ್ಗೆ ಜು. 29 ರಿಂದ ಆಗಸ್ಟ್ 3 ರವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ. ಬೇರೆ ಬೇರೆ ತಾಲ್ಲೂಕಿನಿಂದ ಸುಮಾರು 31 ಪ್ರಕರಣಗಳಿವೆ. ಅದಾಲತ್ತಿಗೆ ಅನುಕೂಲವಾಗಲೆಂದು ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಜೀ ಪೂರ್ವ ಸಮಾಲೋಚನೆಗಳನ್ನು ಕೂಡ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿಸಲು ಅನುಕೂಲವಾಗಲೆಂದು 5% ರಿಯಾಯಿತಿಯನ್ನು ಸರ್ಕಾರ ಆದೇಶದ ಮೂಲಕ ಜಾರಿಗೊಳಿಸಿದ್ದು, ಈ ಸದಾವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬಹುದು.
ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರನ್ನು ದೂರವಾಣಿ ಸಂಖ್ಯೆ 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂರವಾಣಿ ಸಂಖ್ಯೆ: 08192-296885, ಹೊನ್ನಾಳಿ ದೂರವಾಣಿ ಸಂಖ್ಯೆ 08188-251732, ಚನ್ನಗಿರಿ ದೂರವಾಣಿ ಸಂಖ್ಯೆ: 08189-229195 ಮತ್ತು ಜಗಳೂರು ದೂರವಾಣಿ ಸಂಖ್ಯೆ: 08196-227600 ಇವರನ್ನು ಸಂಪರ್ಕಿಸಬಹುದು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್.ಎಲ್.ಹೆಚ್ ಮಾತನಾಡಿ, ವಕೀಲರ ಸಂಘದಿಂದಲೂ ಲೋಕ್ ಅದಾಲತ್ಗಳಲ್ಲಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಮಾಡುತ್ತಾ ಬಂದಿದೆ. ಕಳೆದ ಹಲವಾರು ವರ್ಷದಿಂದ ದಾವಣಗೆರೆ ಜಿಲ್ಲೆಯಲ್ಲಿ ನಿರಂತರವಾಗಿ ಈ ಕಾರ್ಯ ಮಾಡುತ್ತಾ ಬಂದಿದೆ. ಲೋಕ್ ಅದಾಲತ್ನಿಂದ ಜನರ ಸಮಯ, ನ್ಯಾಯಾಲಯದ ಸಮಯ ಉಳಿತಾಯವಾಗುತ್ತದೆ ಎಂದ ಅವರು ಲೋಕ ಅದಾಲತ್ಗೆ ವಕೀಲರ ಸಂಘದ ಸಹಕಾರ ಎಂದಿಗೂ ಇರಲಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ನ್ಯಾಯಾಧೀಶರಾದ ನಿವೇದಿತಾ ಉಪಸ್ಥಿತರಿದ್ದರು
WhatsApp Group Join Now
Telegram Group Join Now
Share This Article
error: Content is protected !!