ಶಿವಮೊಗ್ಗ,ಜು.03
ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ರೂ. 307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರೆ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮ ಅನುಮೋದನೆ ದೊರೆತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಗುರುವಾರ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸೊರಬ ತಾಲ್ಲೂಕಿನ ದಂಡಾವತಿ ಡ್ಯಾಂ ಮಾರ್ಪಡಿತ ಯೋಜನೆ ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು ಯಾವುದೇ ರೈತರ ಜಮೀನು ಹಾಗೂ ಮನೆಗಳನ್ನು ಮುಳುಗಡೆಗೊಳಿಸದೇ ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದರು.
ಸೊರಬ ತಾಲ್ಲೂಕಿನ ಯಡಗೊಪ್ಪ ಗ್ರಾಮದ ಹತ್ತಿರ ದಂಡಾವತಿ ನದಿಗೆ ರೂ.38.50 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸಿ 15 ಕೆರೆಗಳನ್ನು ತುಂಬಿಸುವ ಯೋಜನೆ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ರೂ.54.70 ಕೋಟಿ ವೆಚ್ಚದಲ್ಲಿ ಬ್ಯಾರೇಜ್ /ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ನಿರ್ಮಿಸುವ ಯೋಜನೆ, ಗುಡವಿ ಗ್ರಾಮದ ಹತ್ತಿರ ವರದಾ ನದಿಗೆ ಅಡ್ಡಲಾಗಿ ರೂ.75.60 ಕೋಟಿ ವೆಚ್ದದಲ್ಲಿ ಬ್ಯಾರೇಜ್ ನಿರ್ಮಿಸಿ 0.1017 ಟಿಎಂಸಿ ನೀರನ್ನೆತ್ತಿ 32 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿದೆ.
ಭದ್ರಾವತಿ ತಾಲ್ಲೂಕಿನ ಗೋಣಿಬೀಡು ಗ್ರಾಮದ ಹತ್ತಿರ ರೂ.54 ಕೋಟಿ ಅಂದಾಜು ವೆಚ್ಚದಲ್ಲಿ ಭದ್ರಾನದಿಯಿಂದ 0.19 ಟಿಎಂಸಿ ನೀರನ್ನು ಕಂಬದಾಳ್ ಹೊಸೂರು ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಂಕರಘಟ್ಟ, ಹುಣಸೆಕಟ್ಟೆ, ಗೋಣಿಬೀಡು, ತಮ್ಮಡಿಹಳ್ಳಿ, ರಾಮಿನಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮಗಳ 2 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಭದ್ರಾವತಿ ಪಟ್ಟಣದ ಭದ್ರಾನದಿ ಎಡ ಮತ್ತು ಬಲದಂಡೆಯ ಪ್ರಹಾಹಪೀಡಿತ ಪ್ರದೇಶಗಳನ್ನು ರಕ್ಷಿಸಲು ರೂ.50 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ರೂ.35 ಕೋಟಿ ವೆಚ್ಚದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ರಸ್ತೆ ಸೇತುವೆ ನಿರ್ಮಾಣ ಮತ್ತು ಡೊಣಬಘಟ್ಟ, ಕಾಗೆಕೊಡುಮಗ್ಗೆ, ಹೊಳೆಹೊನ್ನೂರು ಗ್ರಾಮದ ಭದ್ರಾವತಿ ಮುಖ್ಯ ರಸ್ತೆ ನಡುವೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುಮೋದನೆ ದೊರೆತಿದ್ದು ಇನ್ನು ಒಂದೂವರೆ ವರ್ಷದೊಳಗೆ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.
ಹಾಗೂ ಸೊರಬ ತಾಲ್ಲೂಕಿನಲ್ಲಿ ರೂ.561 ಕೋಟಿ ಮೊತ್ತದಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಅಂದಾಜು ಪಟ್ಟಿ ಸಿದ್ದಪಡಿಸಿದ್ದು ಮುಂದಿನ ದಿನಗಳಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.
ಚAದ್ರಗುತ್ತಿ ಪ್ರಾಧಿಕಾರ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ದೇವಸ್ಥಾನದ ಅಭಿವೃದ್ದಿಗಾಗಿ 20 ಎಕರೆ ಜಮೀನು ಹಸ್ತಾಂತರಗೊAಡಿರುತ್ತದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಜಿಲ್ಲಾ ಕ್ರೀಡಾ ಅಭಿವೃದ್ದಿಗೆ ವಿವಿಧ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಪ್ರತಿನಿಧಿಗಳೊಂದಿಗೆ ಜೂ.27 ರಂದು ಸಭೆ ನಡೆಸಿ ಸೂಕ್ತ ಸಲಹೆಸೂಚನೆಗಳನ್ನು ನೀಡಿದ್ದೇನೆ. ನೆಹರು ಕ್ರೀಡಾಂಗಣದ ಸಮಗ್ರ ಅಭಿವೃದ್ದಿಗೆ ರೂ.16.25 ಕೋಟಿ ಸೇರಿದಂತೆ ಒಟ್ಟಾರೆ ಜಿಲ್ಲೆಯ ಸಮಗ್ರ ಕ್ರೀಡಾಭಿವೃದ್ದಿಗೆ 32.25 ಕೋಟಿಗಳ ಪ್ರಸ್ತಾವನೆಯನ್ನು ಪಡೆಯಲಾಗಿದೆ ಎಂದರು.
========
ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ನಿರಂತರವಾಗಿ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದ್ದು, ಇದೀಗ ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ, ಸುಮಾರು 1800 ಕ್ಕೂ ಹೆಚ್ಚು ದಾಖಲಾತಿಗಳನ್ನು ಸಲ್ಲಿಸಲಾಗಿದೆ. ಹಂತ ಹಂತವಾಗಿ ಸಂತ್ರಸ್ತರಿಗೆ ಸಂಪೂರ್ಣ ನ್ಯಾಯ ಒದಗಿಸಲಾಗುವುದು.
ಎಸ್.ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು