Ad image

ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಕ್ರಮಕೈಗೊಳ್ಳಿ: ಬಿ.ಸಿ. ಶಿವಾನಂದ ಮೂರ್ತಿ

Vijayanagara Vani
ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಕ್ರಮಕೈಗೊಳ್ಳಿ: ಬಿ.ಸಿ. ಶಿವಾನಂದ ಮೂರ್ತಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17 ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದ ಮೂರ್ತಿ ಹೇಳಿದರು.
ಇಂದು (ಏ.9) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿ. ಇ. ಟಿ – 2025 ರ ಪರೀಕ್ಷಾ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎಪ್ರಿಲ್ 16 ಮತ್ತು 17 ರಂದು ನಡೆಯಲಿರುವ ಸಿ.ಇ.ಟಿ ಪರೀಕ್ಷೆಯಲ್ಲಿ 6,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಿದ್ದು, ಮಂಡ್ಯ ತಾಲೂಕಿನಲ್ಲಿ 12 ಹಾಗೂ ಕೆಆರ್ ಪೇಟೆ ತಾಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ, ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನ ಪತ್ರಿಕೆಯನ್ನು ಕೊಂಡೊಯ್ಯಲು ತಹಶೀಲ್ದಾರ್ ಬಿ.ಇ.ಒ ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ,
ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ, ಪರೀಕ್ಷೆ ಕೇಂದ್ರದ ಸುತ್ತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೊರಡಿಸಲಾಗುವುದು, ಯಾವುದೇ ಖಾಸಗಿ ವ್ಯಕ್ತಿಗಳು 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸುವಂತಿಲ್ಲ, ಹಾಗೂ ಸುತ್ತಮುತ್ತಲು ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆಯುವಂತಿಲ್ಲ ಎಂದು ಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.
ಸಿ.ಇ.ಟಿ ಪರೀಕ್ಷೆ ಬರೆಯಲು ಬರುವ ಮಕ್ಕಳಿಗೆ ಕುಡಿಯುವ ನೀರು, ಸೂಕ್ತ ಆಸನಗಳು, ಕೊಠಡಿಯಲ್ಲಿ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಪರೀಕ್ಷಾ ಕೊಠಡಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
24 ವಿದ್ಯಾರ್ಥಿಗಳಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ, ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು, ವಿದ್ಯುತ್ ವ್ಯತ್ಯಯ ಉಂಟಾಗದಂತೆ ಪ್ರತಿ ಕೇಂದ್ರಕ್ಕೂ ಇಬ್ಬರು ಲೈನ್ ಮ್ಯಾನ್ ನಿಯೋಜಿಸಲಾಗುವುದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಾಗದಂತೆ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
*ವೆಬ್ ಕಾಸ್ಟಿಂಗ್*
ಸಿ.ಇ.ಟಿ ಪರೀಕ್ಷೆ ನಡೆಯುವ 15 ಕೇಂದ್ರಗಳಲ್ಲೂ ಸಿ.ಸಿ.ಟಿ.ವಿ ಕಡ್ಡಾಯ, ಎಲ್ಲಾ ಕೊಠಡಿಯ ವಿಡಿಯೋಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರದರ್ಶನ ಗೊಳ್ಳುತ್ತಿರುತ್ತವೆ, ಆದ್ದರಿಂದ ಕೊಠಡಿ ಮೇಲ್ವಿಚಾರಕರು ಜಾಗೃತೆಯಿಂದ ಕಾರ್ಯನಿರ್ವಹಿಸಿ ಎಂದು ಎಚ್ಚರಿಕೆ ನೀಡಿದರು.
ಪರೀಕ್ಷಾರ್ಥಿಗಳು ರಿಸ್ಟ್ ವಾಚ್, ಕ್ಯಾಲ್ಕುಲೇಟರ್, ಮೊಬೈಲ್ ಹಾಗೂ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ, ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ಬಿಡುವ ಮೊದಲು ಅವರ ಪ್ರವೇಶ ಪತ್ರವನ್ನು ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಗುರುತು ಖಾತರಿಯಾದ ನಂತರ ಪ್ರವೇಶ ನೀಡತಕ್ಕದ್ದು ಎಂದರು.
ಪರೀಕ್ಷೆಗೆ ನಿಯೋಜಿಸಲಾಗಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಓ.ಎಂ.ಆರ್ ಪತ್ರಿಕೆಯನ್ನು ತುಂಬುವ ವಿಧಾನವನ್ನು ವಿವರವಾಗಿ ತಿಳಿಸಬೇಕು, ವಿದ್ಯಾರ್ಥಿಗಳು ಓ.ಎಂ.ಆರ್ ಪತ್ರಿಕೆಯಲ್ಲಿ ಯಾವುದೇ ರೀತಿಯ ತಪ್ಪುಗಳನ್ನು ಮಾಡದಂತೆ ಮುನ್ನೆಚ್ಚರಿಕೆ ವಹಿಸಬೇಕು, ವಿಶೇಷ ಚೇತನ ಮಕ್ಕಳಿಗೆ ಕೆಳಮಹಡಿಯಲ್ಲೇ ಕೊಠಡಿಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಪರೀಕ್ಷೆಗಳು ಮುಗಿದ ನಂತರ ಯಾವುದೇ ವಿಳಂಬ ಮಾಡದೆ, ಎಲ್ಲಾ ಉತ್ತರ ಪತ್ರಿಕೆಗಳನ್ನು ಜಿಲ್ಲಾ ಖಾಜಾನೆಗೆ ಮಾರ್ಗಾಧಿಕಾರಿಗಳು ತಲುಪಿಸಬೇಕು ಎಂದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಚೆಲುವಯ್ಯ, ಮಂಡ್ಯ ಪಶ್ಚಿಮ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಕೆ.ಎನ್ ಕೇಶವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ-1(ಆಡಳಿತ) ಎಂ.ಬಾಬು, ಜಿಲ್ಲಾ ಖಜಾನೆಯ ಮುಖ್ಯ ಲೆಕ್ಕಿಗ ಬಿ.ಜೆ ಬಸವಣ್ಣ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
error: Content is protected !!
";