ಮೆರವಣಿಗೆಗೆ ಮೆರಗು ನೀಡಿದ ವಿವಿಧ ಜಾನಪದ ಕಲಾತಂಡಗಳು ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ

Vijayanagara Vani
ಮೆರವಣಿಗೆಗೆ ಮೆರಗು ನೀಡಿದ ವಿವಿಧ ಜಾನಪದ ಕಲಾತಂಡಗಳು ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ
ಚಿತ್ರದುರ್ಗಜುಲೈ10:
“ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳು, ಗಣ್ಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ಸ್ವಾಗತಿಸಿದರು, ಬಳಿಕ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಆರಂಭವಾದ ಮೆರವಣಿಗೆಯು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್ಬಿಐ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮಾರ್ಗವಾಗಿ ಒನಕೆ ಓಬವ್ವ ವೃತ್ತದವರೆಗೂ ಸಂಭ್ರಮ, ಸಡಗರದಿಂದ ನಡೆಯಿತು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹಂಪಿಯಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಈಗ ರಥವು ನಮ್ಮ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದು, ಯಾತ್ರೆಗೆ ಜಿಲ್ಲೆಯಲ್ಲಿ ಕನ್ನಡದ ಮನಸುಗಳು ವಿಜೃಂಭಣೆಯಿಂದ ಸ್ವಾಗತ ನೀಡಿವೆ. ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 14ರವರೆಗೂ ಸಂಚರಿಸಲಿದೆ ಎಂದು ಹೇಳಿದರು.
ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ, ನಗರಸಭೆ ಸಹಯೋಗದಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ತಹಸಿಲ್ದಾರ್ ಡಾ. ನಾಗವೇಣಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಇದ್ದರು.
WhatsApp Group Join Now
Telegram Group Join Now
Share This Article
error: Content is protected !!