ಬಿಸಿಲಿನಿಂದ ಉಂಟಾಗುವ ಶಾಖಾಘಾತದ ಲಕ್ಷಣಗಳೇನು?

Vijayanagara Vani
ಬಿಸಿಲಿನಿಂದ ಉಂಟಾಗುವ ಶಾಖಾಘಾತದ ಲಕ್ಷಣಗಳೇನು?

ಬಳ್ಳಾರಿ ಜಿಲ್ಲೆಯಲ್ಲಿಯೂ ಸಹ ಬಿರು ಬಿಸಿಲಿನ ವಾತಾವರಣ ಕಂಡುಬರುತ್ತಿದ್ದು, ಪ್ರತಿಯೊಬ್ಬರು ಆದಷ್ಟು ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು. ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ವಯೋ ವೃದ್ಧರು, ಮಕ್ಕಳು ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔಷಧಿ ಸೇವಿಸುವ ಪ್ರತಿಯೊಬ್ಬರು ಹೊರಗಡೆ ಹೋಗುವುದನ್ನು ತಪ್ಪಿಸಿ, ಬಿಸಿಲಿನ ಶಾಖಾಘಾತದ ಅನಾಹುತದಿಂದ ಪಾರಾಗಲು ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ ಬಾಬು ಅವರು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ಓಆರ್‌ಎಸ್ ಜೀವಜಲ ಪುಡಿಯನ್ನು ಅಗತ್ಯವುಳ್ಳವರಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ರೋಗಿಗಳ ಆರೈಕೆಗಾಗಿ, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳಲಾಗಿದೆ. ಓಆರ್‌ಎಸ್ ದ್ರಾವಣವನ್ನು 1 ಲೀಟರ್ ನೀರಿಗೆ 1 ಪೊಟ್ಟಣದ ಸಂಪೂರ್ಣ ಪುಡಿಯನ್ನು ಹಾಕಿ 24 ಗಂಟೆಯೊಳಗಡೆ ಕುಡಿಯಲು ಬಳಸುವ ಮೂಲಕ ಬಿಸಿಲಿನ ಪ್ರಖರತೆಯಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ನಿರ್ಜಲೀಕರಣ ತಡೆಗಟ್ಟಲು ತುರ್ತು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾ ಕಾಲರಾ ತಂಡ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷಿಸುತ್ತಿದೆ. ಲೋಕಸಭಾ ಚುನಾವಣೆಯ ಹಿನ್ನಲೆ ಜಿಲ್ಲೆಯ ಗಡಿಭಾಗದಲ್ಲಿ ಹಾಗೂ ಇತರೆಡೆ ತೆರೆದಿರುವ 24 ಚೆಕ್‍ಪೋಸ್ಟ್ ಸಿಬ್ಬಂದಿಯವರಿಗೆ ಓಆರ್‍ಎಸ್ ಪೊಟ್ಟಣಗಳನ್ನು ಹಾಗೂ ತುರ್ತು ಚಿಕಿತ್ಸಾ ಔಷಧಿಗಳನ್ನು ವಿತರಿಸಲಾಗಿದೆ.

ಸಾರ್ವಜನಿಕರು ಮಧ್ಯಾಹ್ನದ ವೇಳೆ ಅಗತ್ಯವೆನಿಸುವ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಈ ವೇಳೆಯಲ್ಲಿ ಶುದ್ಧ ಕುಡಿಯುವ ನೀರು, ಛತ್ರಿ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗುವಾಗ ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಬಟ್ಟೆಯನ್ನು ಹಾಕಬೇಕು. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗದಂತೆ ಕಾಳಜಿವಹಿಸಬೇಕು ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

ಶಾಖಾಘಾತ ಸಾಮಾನ್ಯ ಅಪಾಯದ ಚಿಹ್ನೆಗಳು ಬಿಸಿಲಿನಿಂದ ಉಂಟಾಗುವ ಈ ಶಾಖಾಘಾತದ ಲಕ್ಷಣಗಳು ಹೀಗಿವೆ. ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಏಕಾಏಕಿ ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ ಕಾಣಿಸಿಕೊಳ್ಳುತ್ತದೆ. ಇಷ್ಟೇ ಅಲ್ಲದೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಆಗ್ಗಾಗೆ ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಆಗುವುದು ಇವೆಲ್ಲವುಗಳೂ ಸಾಮಾನ್ಯ ಅಪಾಯದ ಚಿಹ್ನೆಗಳಾಗಿವೆ.

ಬಿಸಿಲಿನ ಶಾಖಾಘಾತಕ್ಕೆ ಅಗತ್ಯ ತುರ್ತು ಚಿಕಿತ್ಸೆ ಹೀಗಿರಬೇಕು * ಶಾಖಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ನೆರಳಿರುವೆಡೆಗೆ ಸ್ಥಳಾಂತರಿಸಿ. * ವ್ಯಕ್ತಿಯ ಬಟ್ಟೆಗಳನ್ನು ಸಡಿಲಗೊಳಿಸಿ, ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಬೇಕು. *ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಬೇಕು ಮತ್ತು ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು.

WhatsApp Group Join Now
Telegram Group Join Now
Share This Article
error: Content is protected !!